|

ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ, ಪ್ರತಿಭಟನೆ

ಹಾಸನ.03.ಸೆಪ್ಟೆಂಬರ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪಾಠ ಪ್ರವಚನ ಗೊಂದಲಗಳನ್ನು ಬಗೆಹರಿಸಲು ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳ ನಗರದ ಹೇಮಾವತಿ ಪ್ರತಿಮೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಎಐಡಿಎಸ್‌ಒ ಜಿಲ್ಲಾ ಸಂಚಾಲಕಿ ಚೈತ್ರಾ ಮಾತನಾಡಿ, ‘ರಾಜ್ಯದಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದಿದ್ದು, ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ.ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು, ಇನ್ನೂ ಪಾಠಗಳೇ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟ್‌ನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನನೆಗುದಿಗೆ ಬಿದ್ದಿದೆ’ ಎಂದರು.

‘ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು, ಕೇಂದ್ರದ ನಿರ್ಧಾರಗಳನ್ನು ಪಾಲಿಸುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್‌ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆ ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ತುರ್ತಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಕೂಡಲೇ ಪರಿಹರಿಸಬೇಕು’ ಎಂದು ಆಗ್ರಹಿಸಿದರು.

ನಂತರ ಜಿಲ್ಲಾಧಿಕಾರಿ ಲತಾಕುಮಾರಿ ಅವರ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಕಾರ್ಯಕರ್ತರಾದ ಸುಷ್ಮಾ, ಯಾಸ್ಮಿನ್, ಮೋಹನ್, ತಿಲಕ್, ಅಭಿಷೇಕ್ ಹಾಗೂ ವಿವಿಧ ಕಾಲೇಜಿನ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Similar Posts

Leave a Reply

Your email address will not be published. Required fields are marked *