ಮುಖ್ಯಮಂತ್ರಿ, ಕಂದಾಯ ಇಲಾಖೆಗೆ ಧನ್ಯವಾದ ಅರ್ಪಿಸಿದ ಈಶ್ವರ ಖಂಡ್ರೆ
ಬೀದರ.21. ಜೂನ್.25:-ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪದ 742 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಇಲಾಖೆಗೆ ಧನ್ಯವಾದ ಅರ್ಪಿಸಿದ್ದಾರೆ.
ಭೂ ವಿವಾದದಿಂದಾಗಿ ಅನುಭವ ಮಂಟಪಕ್ಕೆ ಆರಂಭದಲ್ಲಿ ನಿರ್ಧರಿಸಲಾಗಿದ್ದ ಸ್ಥಳದಲ್ಲಿ ಕಾಮಗಾರಿ ನಡೆಸಲಾಗದೆ, ಬೇರೆ ಸ್ಥಳದಲ್ಲಿ ಕಾಮಗಾರಿ ಮಾಡಬೇಕಾಗಿ ಬಂದ ಹಿನ್ನೆಲೆಯಲ್ಲಿ ಹಾಗೂ ಜಿಎಸ್ಟಿ ಶೇ.18ಕ್ಕೆ ಏರಿಕೆ ಆದ ಕಾರಣ ಯೋಜನಾ ವೆಚ್ಚ 612 ಕೋಟಿ ರೂ. ಬದಲಾಗಿ 742 ಕೋಟಿ ರೂ.ಗೆ ಹೆಚ್ಚಳವಾಗಿದ್ದು, ಇದಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಪರಿಷ್ಕೃತ ಅಂದಾಜು ವೆಚ್ಚದಂತೆ 132 ಕೋಟಿ ರೂ. ಹೆಚ್ಚಳವಾಗಿದ್ದು, ಇದಕ್ಕೆ ಅನುಮೋದನೆ ನೀಡಿದ ಸಚಿವ ಸಂಪುಟದ ಎಲ್ಲ ಸಚಿವರಿಗೆ ಮತ್ತು ಭೂಮಿ ನೀಡಿದ ಕಂದಾಯ ಇಲಾಖೆಗೆ ಈಶ್ವರ ಖಂಡ್ರೆ ಧನ್ಯವಾದ ಅರ್ಪಿಸಿದ್ದಾರೆ.
2026ರ ವರ್ಷಾಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ಮುಖ್ಯಮಂತ್ರಿಗಳ ಅಮೃತ ಹಸ್ತದಿಂದ ಉದ್ಘಾಟನೆ ಮಾಡಿಸಲು ಕಾಮಗಾರಿಗೆ ವೇಗ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.