ಬೀದರ.25.ಫೆಬ್ರುವರಿ.25: ಪ್ರತಿಯೊಂದು ಇಲಾಖೆಯ ಯಾವುದೇ ಕಾರ್ಯಕ್ರಮವು ಹಾಗೂ ಯೋಜನೆಗಳು ಯಶಸ್ವಿಯಾಗಬೇಕಾದರೆ ಜನಜಾಗೃತಿ ಮುಖ್ಯ, ತಾವೆಲ್ಲರೂ ಕ್ಷೇತ್ರ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿವಿಧ ಮಾಧ್ಯಮ, ವಿಧಾನ ಹಾಗೂ ಸಂವಹನದ ಮೂಲಕ ಹಲವಾರು ಆರೋಗ್ಯ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುತ್ತಿರುವ ಫಲವಾಗಿ ಆರೋಗ್ಯ ಕಾರ್ಯಕ್ರಮಗಳು ಯಶಸ್ವಿಯಾಗಿ ಅನುಷ್ಠಾನವಾಗುತ್ತಿವೆ.
ಮಾಹಿತಿ ಶಿಕ್ಷಣ ಸಂವಹನ ಚಟುವಟಿಕೆಗಳು ಹೊಸ ಹೊಸ ಅನ್ವೇಷಣೆಗಳನ್ನು ಅಳವಡಿಸಿಕೊಂಡು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕೆಂದು ಕಲಬುರಗಿ ವಿಭಾಗೀಯ ಜಂಟಿ ನಿರ್ದೇಶಕರಾದ ಡಾ.ಶಂಕ್ರೆಪ್ಪಾ ಮೈಲಾರೆ ಕರೆ ನೀಡಿದರು.
ಅವರು ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೀದರನ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಕಲಬುರಗಿ ವಿಭಾಗ ಮಟ್ಟದ ಐಇಸಿ ಪರಿಶೀಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವೀಡಿಯೋ ಪ್ರದರ್ಶನ, ಸಾಮಾಜಿಕ ಜಾಲತಾಣ ಬಳಕೆ ಹಾಗೂ ಟಾರ್ಗೆಟೆಡ್ ಗ್ರೂಪ್ ಅನ್ನು ಆಯ್ಕೆ ಮಾಡಿಕೊಂಡು ಕಾರ್ಯಕ್ರಮ ನಿರ್ವಹಿಸುತ್ತಿದ್ದು ಒಳ್ಳೆಯ ಬೆಳವಣಿಗೆ ಎಂದು ಪ್ರೋತ್ಸಾಹಿಸಿದರು.
ಬೀದರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪ ಕಾಂಬಳೆ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿ ವರ್ಷವೂ ರೊಟೇಶನ್ ಮೂಲಕ ಒಂದೊಂದು ಜಿಲ್ಲೆಯಲ್ಲಿ ಐಇಸಿ ಪ್ರಗತಿ ಪರಿಶೀಲನಾ ಕಾರ್ಯಕ್ರಮ ಜರುಗುತ್ತಿದ್ದು, ಈ ಬಾರಿ ಬೀದರ ಜಿಲ್ಲೆಗೆ ಈ ಅವಕಾಶ ದೊರಕಿದ್ದು ಹೊಸ ಹೊಸ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಹೊಸ ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಹಾಗೂ ಬೇರೆ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ನಿರ್ವಹಣೆಯಾದ ಚಟುವಟಿಕೆಗಳನ್ನು ಉಳಿದ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸುವ ಉದ್ದೇಶದೊಂದಿಗೆ ಈ ಕಾರ್ಯಕ್ರಮ ಜರುಗಿಸಲಾಗುತ್ತದೆ ಎಂದು ವಿವರಸಿದರು.
ಈ ಸಂದರ್ಭದಲ್ಲಿ ಕಲಬುರಗಿ ವಿಭಾಗೀಯ ಜಂಟಿ ನಿರ್ದೇಶನಾಲಯ ಸಹಾಯಕ ನಿರ್ದೇಶಕರಾದ ಡಾ|| ಶರಣಬಸಪ್ಪ ಗಣಜಲಖೇಡ, ಬೀದರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಮ ಡಾ. ಧ್ಯಾನೇಶ್ವರ ನೀರಗುಡೆ, ಸಂಯೋಜಕರು ರಾಜ್ಯ ಐಇಸಿ ಕೋಶ ಬೆಂಗಳೂರು ಡಾ. ಹಂಸರೇಖಾ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಶಿವಶಂಕರ.ಬಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದೀಲಿಪ್ ಡೋಂಗರೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಕಿರಣ ಪಾಟೀಲ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಎಸ್.ಕೆ. ಬೊಮ್ಮಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ವಿಭಾಗೀಯ ಜಂಟಿ ನಿರ್ದೇಶನಾಲಯ ಕಲಬುರಗಿ ಶ್ರೀಶೈಲ ದೀವಟಗಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.