ಬೀದರ.13.ಫೆಬ್ರುವರಿ.25:-ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ಸ್ಥಳಗಳಿಂದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಲು ಅನುಕೂಲವಾಗುವಂತೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ ಸಿ.ಎಸ್.ಆರ್.ನಿಧಿಯಡಿ 30 ಲಕ್ಷ ರೂ. ವೆಚ್ಚದಲ್ಲಿ ಬಸ್ ಸೌಲಭ್ಯವನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ಲೋಕಾರ್ಪಣೆ ಮಾಡಿದರು.
ನಂತರ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ ಅವರು ಸದರಿ ವಿಜ್ಞಾನ ಕೇಂದ್ರವನ್ನು ರಾಷ್ಟ್ರಪತಿಯಾಗಿದ್ದ ಖ್ಯಾತ ವಿಜ್ಞಾನಿ, ಮಿಸೈಲ್ ಮ್ಯಾನ್ ಎಂದೇ ಖ್ಯಾತಿಯಾಗಿರುವ ಡಾ.ಅಬ್ದುಲ್ ಕಲಾಂ ಅವರು ಉದ್ಘಾಟನೆ ಮಾಡಿದ್ದರು.

ಅವರು ವಿದ್ಯಾರ್ಥಿಗಳೊಂದಿಗೆ ಸದಾ ಸಂವಾದ ಮಾಡುತ್ತಿದ್ದರು, ವಿದ್ಯಾರ್ಥಿಗಳಿಗೆ ವಿಜ್ಞಾನ, ತಂತ್ರಜ್ಞಾನದಲ್ಲಿ ಹೆಚ್ಚಿನ ಆಸಕ್ತಿ ಮೂಢಿಸುವಲ್ಲಿ ವಿಜ್ಞಾನ ಕೇಂದ್ರ ಉಪಯೋಗವಾಗಲಿದೆ.

ಈ ರಾಜ್ಯದ ದೇಶದ ಭವಿಷ್ಯ ರೂಪಿಸುವಲ್ಲಿ ವಿದ್ಯಾರ್ಥಿಗಳು ಉನ್ನತ ಜ್ಞಾನ ಸಂಪಾದಿಸಬೇಕು. ವಾಸ್ತವ ಸತ್ಯದ ಅನ್ವೇಷಣೆ ಮಾಡುವುದೇ ವಿಜ್ಞಾನ, ಅನೇಕ ಗ್ರಾಮೀಣ ವಿದ್ಯಾರ್ಥಿಗಳು ಉನ್ನತ ಸ್ಥಾನ ಪಡೆದು ವ್ಯಕ್ತಿತ್ವ ರೂಪಿಸಿಕೊಂಡಿದ್ದಾರೆ ಎಂದರು.
ವಿದ್ಯಾರ್ಥಿಗಳು ಪರಿಸರ ಪ್ರಕೃತಿ ಸಂರಕ್ಷಣೆಯಲ್ಲಿ ಸಹ ಆಸಕ್ತಿ ಹೆಚ್ಚಿಸಿಕೊಳ್ಳಬೇಕು. ಆಧುನಿಕ ಅಭಿವೃದ್ಧಿಯಿಂದ ಮಾಲಿನ್ಯ ಹೆಚ್ಚುತ್ತಿದೆ. ಈಗಲೇ ಬೀದರನಲ್ಲಿ 33 ಡಿಗ್ರಿ ಉಷ್ಣತೆ ಇದೆ.

ದೆಹಲಿಯಲ್ಲಿ ಕೆಲವೊಮ್ಮೆ 50 ಡಿಗ್ರಿ ಆಗಿದೆ.. ಓಝೋನ್ ಪರರ ರಕ್ಷಣೆ ಮಹತ್ವದ್ದಾಗಿದೆ. ಆದ್ದರಿಂದ ಗಿಡ ಮರಗಳನ್ನು ಬೆಳೆಸಬೇಕೆಂದು ಸಚಿವ ಈಶ್ವರ ಖಂಡ್ರೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾದಿಕಾರಿಗಳಾದ ಶಿಲ್ಪಾ ಶರ್ಮಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಮಹ್ಮದ ಗೌಸ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಸೇರಿದಂತೆ ಇತರರು ಉಪಸ್ಥಿತರಿದ್ದರು.