|

ಎಸ್‍ಎಸ್‍ಎಲ್‍ಸಿ ಫಲಿತಾಂಶ ಹೆಚ್ಚಳಕ್ಕೆ 29 ಅಂಶಗಳ ಕಾರ್ಯಕ್ರಮ ಎಲ್ಲಾ ಶಾಲೆಗಳಲ್ಲಿ ಕಡ್ಡಾಯ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.25ಜುಲೈ.25:- ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಹೊರಡಿಸಿರುವ 29 ಅಂಶಗಳ ಕಾರ್ಯಕ್ರಮಗಳನ್ನು ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಜಾರಿಗೆ ತರಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.

ಅವರು ಇತ್ತೀಚಿಗೆ ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ 2024-25 ನೇ ಸಾಲಿನ ಪರಖ ರಾಷ್ಟ್ರೀಯ ಸರ್ವೆಕ್ಷಣಾ ಸಮೀಕ್ಷೆ ಹಾಗೂ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಮತ್ತು ಎಸ್.ಎಸ್.ಎಲ್.ಸಿ. ಫಲಿತಾಂಶವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಇಲಾಖೆ ಹೊರಡಿಸಿರುವ 29 ಅಂಶಗಳ ಆದೇಶವನ್ನು  ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಕ್ರೈಸ್ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶಾಲೆಗಳ ಮತ್ತು ಕೇಂದ್ರ ಸರ್ಕಾರದ ನವೋದಯ, ಕೇಂದ್ರೀಯ ವಿದ್ಯಾಲಯಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿಯೊಂದು ಶಾಲೆಗಳ ಮುಖ್ಯ ಶಿಕ್ಷಕರಿಂದ ತಮ್ಮ ಶಾಲೆಯಲ್ಲಿ ಫಲಿತಾಂಶ ಸುಧಾರಣೆಗಾಗಿ ಕೈಗೊಳ್ಳುತ್ತಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಮತ್ತು ಯಾವ ರೀತಿ ಪಾಠ ಬೋಧಿಸಬೇಕು, ಶಾಲೆಯಲ್ಲಿ ಕೈಗೊಳ್ಳಬಹುದಾದ ನಾವೀನ್ಯಯುತ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಜಿಲ್ಲಾಧಿಕಾರಿಗಳು ನೀಡಿದರು. ಪರಖ ರಾಷ್ಟ್ರೀಯ ಸರ್ವೆಕ್ಷಣಾ ಸಮೀಕ್ಷೆಯ ಪ್ರಕಾರ ಜಿಲ್ಲೆಯ ಫಲಿತಾಂಶ ಕಡಿಮೆ ಇರುವ ಅಸಮಧಾನ ವ್ಯಕ್ತ ಪಡಿಸಿದ ಜಿಲ್ಲಾಧಿಕಾರಿಗಳು ಈ ರೀತಿಯ ಫಲಿತಾಂಶ ಮರುಕಳಿಸದಂತೆ ಎಲ್ಲಾ ಶಿಕ್ಷಕರು ಎಚ್ಚರಿಕೆಯಿಂದ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಮುಕುಲ ಜೈನ್ ಮುಖ್ಯ ಶಿಕ್ಷಕರಿಗೆ ಯಾವ ರೀತಿ ಗಣಿತ ಮತ್ತು ವಿಜ್ಷಾನ ವಿಷಯದ ಪ್ರಶ್ನೆ ಪತ್ರಿಕೆಯ ವಿಶ್ಲೇಷಣೆ ಮಾಡಬೇಕು ಎಂಬುದರ ಕುರಿತು ಹಾಗೂ ಬಹು ಆಯ್ಕೆ ಪ್ರಶ್ನೆಗಳಿಗೆ ಹೇಗೆ ಉತ್ತರಿಸಬೇಕು ಎಂಬುದರ ಕುರಿತು ಸವಿವರ ಮಾಹಿತಿ ನೀಡಿದರು.
ಇನ್ನೋರ್ವ ಪ್ರೊಬೆಷನರ್ ಐ.ಎ.ಎಸ್ ಅಧಿಕಾರಿಗಳಾದ ರಮ್ಯಾ ಅವರು ಸಮಾಜ ವಿಷಯದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಡಯಟ್ ಪ್ರಾಚಾರ್ಯರರು, ಉಪನ್ಯಾಸಕರು, ಡಿ.ವೈ.ಪಿ.ಸಿ. ಗಳು ಸೇರಿದಂತೆ ಇಲಾಖೆಯ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.

Similar Posts

Leave a Reply

Your email address will not be published. Required fields are marked *