ಔರಾದ್.29.ಜನವರಿ.26:ಸರ್ಕಾರಿ ಶಾಲೆಗಳು, ವಸತಿ ಶಾಲೆ ಹಾಗೂ ವಸತಿ ನಿಲಯಗಳಿಗೆ ಕಳಪೆ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಪೂರೈಕೆ ಮಾಡುತ್ತಿರುವ ಪೂರೈಕೆದಾರರ ವಿರುದ್ಧ ಕ್ರಮ ಜರುಗಿಸುವಂತೆ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕೆಲವೆಡೆಗಳಲ್ಲಿ ಆಹಾರ ಸಾಮಗ್ರಿಗಳು ನಿಗದಿತ ಮಾನದಂಡಗಳನ್ನು ಪೂರೈಸದೇ, ಹಾಳಾದ ಹಾಗೂ ಸೇವನೆಗೆ ಅಸಮರ್ಪಕವಾಗಿರುವುದು ಗಮನಕ್ಕೆ ಬಂದಿದ್ದು, ಇದು ಸರ್ಕಾರದ ಮೇಲ್ವಿಚಾರಣಾ ವ್ಯವಸ್ಥೆಯ ವೈಫಲ್ಯವನ್ನು ತೋರಿಸುತ್ತದೆ. ಬಡ ಮತ್ತು ಹಿಂದುಳಿದ ವರ್ಗದ ಮಕ್ಕಳಿಗೆ ಆಶ್ರಯವಾಗಿರುವ ವಸತಿ ಶಾಲೆಗಳಲ್ಲಿ ಈ ರೀತಿಯ ನಿರ್ಲಕ್ಷ್ಯ ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ.
ಈ ಕುರಿತು ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತಿದ್ದು, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಲಿಖಿತ ಪತ್ರ ಸಲ್ಲಿಸಿ ಸಮಸ್ಯೆ ಗಂಭೀರತೆಯ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ ಎಂದಿದ್ದಾರೆ.
ಆಹಾರ ಪೂರೈಕೆದಾರರಿಂದಾಗಿ ಸರ್ಕಾರಿ ಶಾಲೆಗಳು, ವಸತಿ ಶಾಲೆ ಹಾಗೂ ವಸತಿ ನಿಲಯಗಳ ಮಕ್ಕಳ ಪೌಷ್ಟಿಕತೆ ಹಾಗೂ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಶಾಲಾ ಮಕ್ಕಳ ವಿಚಾರದಲ್ಲಿ ಯಾವುದೇ ರೀತಿಯ ತೊಡಕು ಅಥವಾ ಲೋಪಗಳನ್ನು ಸಹಿಸಲಾಗದು ಎಂದಿದ್ದಾರೆ.
ಕಳಪೆ ಆಹಾರ ಸಾಮಗ್ರಿಗಳನ್ನು ಪೂರೈಕೆ ಮಾಡುತ್ತಿರುವ ಪೂರೈಕೆದಾರರ ವಿರುದ್ಧ ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜೊತೆಗೆ, ಆಹಾರ ಸಾಮಗ್ರಿಗಳ ಗುಣಮಟ್ಟ ಪರಿಶೀಲನೆಗೆ ನಿಯಮಿತ ಹಾಗೂ ಪರಿಣಾಮಕಾರಿ ತಪಾಸಣೆ ವ್ಯವಸ್ಥೆಯನ್ನು ಜಾರಿಗೆ ತಂದು, ಸರ್ಕಾರಿ ಶಾಲೆ, ವಸತಿ ಶಾಲೆ ಹಾಗೂ ವಸತಿ ನಿಲಯಗಳ ಮಕ್ಕಳಿಗೆ ಶುದ್ಧ, ಪೌಷ್ಟಿಕ ಮತ್ತು ಸುರಕ್ಷಿತ ಆಹಾರ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ಕಳಪೆ ಆಹಾರ ಪೂರೈಕೆ: ಕ್ರಮಕ್ಕೆ ಶಾಸಕ ಪ್ರಭು ಚವ್ಹಾಣ ಆಗ್ರಹ.?