ಹೊಸ ದೆಹಲಿ.26.ಜುಲೈ.26: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಮೋದಿ ಸರ್ಕಾರ ಮಹತ್ವದ ನಿರ್ಧಾರ ಈ ಹೊಣೆಯನ್ನು ಕನ್ನಡಿಗರಾದ ಪ್ರಲ್ಹಾದ್ ಜೋಶಿ ಅವರಿಗೆ ನೀಡಿದೆ. ಪ್ರಲ್ಹಾದ್ ಜೋಶಿ ಈಗಾಗಲೇ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಇಲಾಖೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಶಿಕ್ಷಣ ಇಲಾಖೆಯ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಪ್ರಧಾನ್ ಅವರ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಕ್ಯಾಬಿನೆಟ್ ಸಚಿವರಾಗಿರುವ ಜೋಶಿ ಅವರಿಗೆ ಅಸ್ತಿತ್ವದಲ್ಲಿರುವ ಖಾತೆಯ ಜತೆಗೆ ಶಿಕ್ಷಣ ಸಚಿವಾಲಯದ ಜವಾಬ್ದಾರಿಯನ್ನು ವಹಿಸುವಂತೆ ರಾಷ್ಟ್ರಪತಿ ನಿರ್ದೇಶಿಸಿದರು ಎಂದು ಮೂಲಗಳು ತಿಳಿಸಿವೆ. ಧಾರವಾಡ ಕ್ಷೇತ್ರದ ಸಂಸದರಾಗಿರುವ ಪ್ರಲ್ಹಾದ್ ಜೋಶಿ ಅಂತಾರಾಷ್ಟ್ರೀಯ ಸೌರ ಒಕ್ಕೂಟದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಲ್ಹಾದ್ ಜೋಶಿ ಹಿನ್ನೆಲೆ
1962ರಲ್ಲಿ ವಿಜಯಪುರದಲ್ಲಿ ಜನಿಸಿದ ಪ್ರಲ್ಹಾದ್ ಜೋಶಿ 1992-94ರ ಅವಧಿಯಲ್ಲಿ ಹುಬ್ಬಳ್ಳಿಯ ಕಿತ್ತೂರು ರಾಣಿ ಚನ್ನಮ್ಮ ಮೈದಾನ (ಈದ್ಗಾ ಮೈದಾನ) ರಾಷ್ಟ್ರಧ್ವಜ ಹಾರಿಸುವ ಚಳವಳಿಯ ಮುಂಚೂಣಿ ವಹಿಸುವ ಮೂಲಕ ರಾಜಕೀಯವಾಗಿ ಗಮನ ಸೆಳೆದರು. 9 ವರ್ಷದ ಬಾಲಕನಾಗಿದ್ದಾಗಲೇ ಅವರು ರಾಷ್ಟ್ರೀಯ ಸ್ವಯಂ ಸೇವಕರಾಗಿ (RSS) ಸೇರಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಇವರು ಧಾರವಾಡ ಲೋಕಸಭಾ ಕ್ಷೇತ್ರದಿಂದ 5 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. 2004ರಿಂದ ಸತತವಾಗಿ ಸಂಸದರಾಗಿ ಆಯ್ಕೆಯಾಗಿರುವ ಜೋಶಿ, 2019ರಿಂದ ಕೇಂದ್ರ ಸಚಿವರಾಗಿಯೂ ಕೂಡ ಕಾರ್ಯನಿರ್ವಹಿಸಿದ್ದಾರೆ. ಹಿಂದಿ ಹಾಗೂ ಇಂಗ್ಲಿಷ್ನಲ್ಲಿ ಉತ್ತಮ ಹಿಡಿತ ಹೊಂದಿರುವ ಇವರು ನರೇಂದ್ರ ಮೋದಿ ಅವರ ಟೀಮ್ನಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.
2019ರಲ್ಲಿ ಕೇಂದ್ರ ಸಚಿವ
2019ರಲ್ಲಿ ಎನ್ಡಿಎ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಕೇಂದ್ರ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡರು. ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿಗಳ ಇಲಾಖೆಯನ್ನು ಸಮರ್ಥವಾಗಿ ನಿರ್ವಹಿಸಿದರು. ಆ ಮೂಲಕ ಮೋದಿ ಟೀಮ್ ಕಣ್ಣಿಗೆ ಬಿದ್ದ ಅವರು 2024ರಲ್ಲಿಯೂ ಸಚಿವರಾಗಿ ಮುಂದುವರಿದರು. ಯಾವ ಖಾತೆಯನ್ನು ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸುವ ಕಲೆ ಅವರಿಗಿದೆ. ಜತೆಗೆ ವಿವಾದ ಇಲ್ಲದಿರುವುದು ಅವರ ಮತ್ತೊಂದು ಪ್ಲಸ್ ಪಾಯಿಂಟ್.






Any questions related to ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ:?