ಬೀದರ.13.ಫೆಬ್ರುವರಿ.25:- ವಿಶ್ವ ಸಂಸ್ಥೆಯು 2030 ರೊಳಗಾಗಿ ವಿಶ್ವದಾದ್ಯಂತ ಕ್ಷಯರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಸನ್ನದ್ಧವಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಪಣತೊಟ್ಟು ಶ್ರಮಿಸಬೇಕೆಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದರು.
ಬೀದರ ನಗರದಲ್ಲಿಂದು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಬೀದರ ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿಗಳ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷಯರೋಗವು ಸಾಂಕ್ರಾಮಿಕ ರೋಗವಾಗಿದ್ದು ಸಾರ್ವಜನಿಕರು ಕೆಮ್ಮು, ಜ್ವರ ಸುದೀರ್ಘ ಕಾಲ ಇದ್ದಲ್ಲಿ ತಕ್ಷಣವೇ ಜಿಲ್ಲಾಸ್ಪತ್ರೆಗೆ ಬಂದು ಪರೀಕ್ಷಿಸಿಕೊಳ್ಳಬೇಕು.

ಹಲವು ದಶಕಗಳ ಹಿಂದೆ ಕ್ಷಯರೋಗ ಒಂದು ಮಹಾಮಾರಿ ಆಗಿತ್ತು. ಕ್ಷಯರೋಗ ಕಂಡುಬಂದಲ್ಲಿ ಅಂಥವರನ್ನು ಗ್ರಾಮದ ಹೊರಗೆ ವಾಸುತ್ತಿದ್ದರು. ಆದರೆ ಈಗ ಕ್ಷಯರೋಗಕ್ಕೆ ಉಚಿತ ಔಷಧಿ ಲಭ್ಯವಿದ್ದು ವಾಸಿಯಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಬೀದರ ಜಿಲ್ಲೆಯಲ್ಲಿ ಸುಮಾರು 2 ಸಾವಿರ ಕ್ಷಯರೋಗಗಳಿದ್ದು ಅನೇಕರು ವಾಸಿಯಾಗಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಕ್ಷಯರೋಗಿಗಳನ್ನು ಪತ್ತೆ ಹಚ್ಚಿ ನಿವಾರಣೆಗೆ ಶ್ರಮಿಸಬೇಕೆಂದರು.

ಈ ಕಾರ್ಯಕ್ರಮದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್, ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ, ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ದ್ಯಾನೇಶ್ವರ ನಿರಗುಡೆ, ಕೆ.ಆರ್.ಐ.ಡಿ.ಎಲ್. ನ ಕಾರ್ಯನಿರ್ವಾಹಕ ಅಭಿಯಂತರರಾದ ಅಭಿಷೇಕ ಪೊಲಾ, ಜಿಲ್ಲಾ ಕ್ಷಯರೋಗ ಅಧಿಕಾರಿ ಅನಿಲಕುಮಾರ ಚಿಂತಾಮಣಿ ಸೇರಿದಂತೆ ವಿವಿಧ ಕಾರ್ಯಕ್ರಮ ಅಧಿಕಾರಿಗಳು ಉಪಸ್ಥಿತರಿದ್ದರು.