ಬೀದರ್.30.ಡಿಸೆಂಬರ್.25: ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಈಶ್ವರ ಖಂಡ್ರೆ ಅವರು ಇಂದು ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಬೀದರ ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾದ “ಗ್ಯಾರಂಟಿ ಕಾರ್ಯಾಗಾರ – ಗ್ಯಾರಂಟಿ ಉತ್ಸವ” ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಇಂದು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಹೆಮ್ಮೆಯಿಂದ ಹೇಳಿದರು. ಒಂದು ಕಾಲದಲ್ಲಿ ಗ್ಯಾರಂಟಿ ಯೋಜನೆಗಳನ್ನು ಹೀಯಾಳಿಸಿ ಟೀಕಿಸಿದ್ದ ವಿರೋಧ ಪಕ್ಷಗಳೇ ಇಂದು ನಮ್ಮ ಯೋಜನೆಗಳನ್ನು ಅನುಕರಿಸಲು ಮುಂದಾಗಿರುವುದು, ಕಾಂಗ್ರೆಸ್ ಸರ್ಕಾರದ ದೂರದೃಷ್ಟಿ ಮತ್ತು ಜನಪರ ಆಡಳಿತಕ್ಕೆ ಸಿಕ್ಕ ದೊಡ್ಡ ಗೌರವವಾಗಿದೆ ಎಂದರು.
ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳು ಬಡವರು, ಮಹಿಳೆಯರು, ಕಾರ್ಮಿಕರು, ರೈತರು ಮತ್ತು ಯುವಕರ ಬದುಕಿಗೆ ನಿಜವಾದ ಭರವಸೆ ನೀಡಿವೆ. ಈ ಯೋಜನೆಗಳು ಕೇವಲ ಘೋಷಣೆಗಳಲ್ಲ, ಜನರ ಜೀವನದಲ್ಲಿ ನೈಜ ಬದಲಾವಣೆ ತರುವ ಕಾರ್ಯಗಳಾಗಿವೆ ಎಂದು ಸಚಿವರು ಹೇಳಿದರು.
ಪ್ರತಿ ಅರ್ಹ ಫಲಾನುಭವಿಗೂ ಯಾವುದೇ ಭೇದಭಾವವಿಲ್ಲದೆ ಯೋಜನೆಗಳ ಲಾಭ ತಲುಪಬೇಕು ಎಂಬುದು ಕಾಂಗ್ರೆಸ್ ಸರ್ಕಾರದ ಸ್ಪಷ್ಟ ನಿಲುವಾಗಿದೆ. ಅಧಿಕಾರಿಗಳು, ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳು ಒಟ್ಟಾಗಿ ಕಾರ್ಯನಿರ್ವಹಿಸುವ ಮೂಲಕ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಬದ್ಧರಾಗಬೇಕು ಎಂದು ಅವರು ಕರೆ ನೀಡಿದರು.
ಜನಪರ ಆಡಳಿತ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯೇ ಕಾಂಗ್ರೆಸ್ ಸರ್ಕಾರದ ಮೂಲ ಧ್ಯೇಯವಾಗಿದ್ದು, ಈ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಪ್ರತಿಯೊಬ್ಬ ನಾಗರಿಕರ ಬದುಕಿನಲ್ಲಿ ಆಶಾಕಿರಣ ಮೂಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಸಚಿವ ಈಶ್ವರ ಖಂಡ್ರೆ ಅವರು ವಿಶ್ವಾಸ ವ್ಯಕ್ತಪಡಿಸಿದರು.






Any questions related to ಗ್ಯಾರಂಟಿ ಕಾರ್ಯಾಗಾರ – ಗ್ಯಾರಂಟಿ ಉತ್ಸವ”?