ರಾಜ್ಯದ ಜನತೆಗೆ ಗವಿಸಿದ್ದೇಶ್ವರ ಒಳ್ಳೆಯ ಆಶೀರ್ವಾದ ಮಾಡಲಿ- ಸಚಿವ ಶಿವರಾಜ ಎಸ್. ತಂಗಡಗಿ.
ಕೊಪ್ಪಳ.05.ಜನವರಿ.26: ಕೊಪ್ಪಳ ಜಿಲ್ಲೆ ಹಾಗೂ ರಾಜ್ಯದ ಜನರಿಗೆ ಶ್ರೀ ಗವಿಸಿದ್ದೇಶ್ವರ ಒಳ್ಳೆಯ ಆಶೀರ್ವಾದಮಾಡಿ, ಜನರು ನೆಮ್ಮದಿಯ ಬದುಕು ಕಟ್ಟಿಕೊಳ್ಳುವಂತಾಗಲಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಹೇಳಿದರು.
ಅವರು ಸೋಮವಾರ ಶ್ರೀ ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ಗವಿಸಿದ್ದೇಶ್ವರ ಮಠದ ತೇರು ಮೈದಾನದಲ್ಲಿ ಹಮ್ಮಿಕೊಂಡಿದ್ದ ತೋಟಗಾರಿಕೆ ಇಲಾಖೆಯ ಫಲ-ಪುಷ್ಪ ಪ್ರದರ್ಶನ, ಕೃಷಿ ಇಲಾಖೆಯ ವಸ್ತುಪ್ರದರ್ಶನ ಮಳಿಗೆಗಳ ಉದ್ಘಾಟನೆ ಮತ್ತು ಅಕ್ಕ- ಪಡೆಯ ವಾಹನ ಹಾಗೂ ಸಾರಿಗೆ ಇಲಾಖೆಯ ನೂತನ ಐದು ಬಸ್ಸುಗಳಿಗೆ ಚಾಲನೆ ನೀಡಿದ ನಂತರ ಪತ್ರಕರ್ತರಿಗೆ ಮಾಹಿತಿ ನೀಡಿ ಮಾತನಾಡಿದರು.
ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿ ಪಡೆದ ಶ್ರೀ ಗವಿಸಿದ್ದೇಶ್ವರ ಜಾತ್ರೆ ಪ್ರತಿವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ನಡೆಯುತ್ತಿದೆ. ಜಿಲ್ಲೆಯ ಜನರು ಮಾತ್ರವಲ್ಲದೆ, ಉತ್ತರ ಕರ್ನಾಟಕ ಸೇರಿದಂತೆ ಇಡೀ ರಾಜ್ಯದ ಜನರು ಈ ಜಾತ್ರೆಯಲ್ಲಿ ಭಾಗವಹಿಸುತ್ತಾರೆ. ಗವಿಸಿದ್ದೇಶ್ವರ ಎಲ್ಲಾ ಜನರಿಗೆ ವಿಶೇಷವಾಗಿ ರೈತರಿಗೆ ಒಳ್ಳೆಯದನ್ನು ಮಾಡಲಿ. ಒಳ್ಳೆಯ ಮಳೆ ಬೆಳೆಯಾಗಿ ರೈತರು ನೆಮ್ಮದಿಯಾಗಿ ಇರುವಂತಾಗಲಿ. ಇಂದು ಗವಿಸಿದ್ದೇಶ್ವರ ಮಠದ ತೇರು ಮೈದಾನದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಫಲ-ಪುಷ್ಪ ಪ್ರದರ್ಶನ ಹಾಗೂ ಕೃಷಿ ಇಲಾಖೆಯ ವಸ್ತಪ್ರದರ್ಶನ ಮಳಿಗೆಗಳಿಗೆ ಚಾಲನೆ ನೀಡಲಾಗಿದ್ದು, ಇದರಲ್ಲಿ ಕೃಷಿ ಸಂಬoಧಿಸಿದ ವಿಷಯಗಳ ಕುರಿತು ಬಹಳಷ್ಟು ಮಾಹಿತಿ ಜನರಿಗೆ ದೊರೆಯಲಿದ್ದು ಸಾರ್ವಜನಿಕರು ಹಾಗೂ ರೈತರು ಈ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ಶ್ರೀ ಗವಿಸಿದ್ದೇಶ್ವರ ಜಾತ್ರೆಯ ವಿಶೇಷ ಭಕ್ತರೇ ಬಂದು ನಿಂತು ಈ ಜಾತ್ರೆಯನ್ನು ಮಾಡುವುದರ ಜೊತೆಗೆ ಸತತ 15 ದಿನಗಳ ಕಾಲ ಉಚಿತ ದಾಸೋಹ ನಡೆಸುತ್ತಾರೆ ಹಾಗೂ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾರೆ. ರಥೋತ್ಸವ ನೋಡಲು ಲಕ್ಷಾಂತರ ಜನರು ಸೇರುತ್ತಾರೆ. ರಥೋತ್ಸವಕ್ಕೆ ಬರುವ ಭಕ್ತರು ಶಾಂತಿಯುತವಾಗಿ ಬಂದು ರಥೋತ್ಸವ ಮುಗಿಸಿಕೊಂಡು ಶಾಂತಿಯುತವಾಗಿ ಹಾಗೂ ಕ್ಷೇಮವಾಗಿ ತಮ್ಮ-ತಮ್ಮ ಊರುಗಳಿಗೆ ಹೋಗಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಕೊಪ್ಪಳ ಸಂಸದರಾದ ಕೆ. ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಮಾಜಿ ಸಂಸದರಾದ ಸಂಗಣ್ಣ ಕರಡಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಕೃಷ್ಣ ಉಕ್ಕುಂದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿ.ಡಿ.ಕೃಷ್ಣಮೂರ್ತಿ ಸೇರಿದಂತೆ ಇತರೆ ಜನಪ್ರತಿನಿಧಿಗಳು, ಹಾಗೂ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.






Any questions related to ಜಿಲ್ಲಾ ಉಸ್ತುವಾರಿ ಸಚಿವರಿಂದ ಫಲ-ಪುಷ್ಪ ಪ್ರದರ್ಶನ ಹಾಗೂ ವಸ್ತಪ್ರದರ್ಶನ ಮಳಿಗೆಗಳ ಉದ್ಘಾಟನೆ?