|

ದಲಿತರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಡಳಿತ ಮತ್ತು
ಪೊಲೀಸ್ ಇಲಾಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ


ಬೀದರ.02.ಮೇ.25:- ಬೀದರ್ ಜಿಲ್ಲೆಯ ಕೆಲವು ಕಡೆ ದಲಿತರ ಮೇಲೆ ಹಲ್ಲೆ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ತ್ವರಿತ ಕ್ರಮಕ್ಕೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.


ದೂರಿನಲ್ಲಿ ನೊಂದವರು ತಕ್ಷಣವೇ ರಕ್ಷಣೆ ಪಡೆಯಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಚಿವರು ಹೇಳಿದ್ದಾರೆ. ಬಸವಣ್ಣರು ನಿರ್ಮಿಸಿದ ಸಮತೆಯ ಸಮಾಜದ ತತ್ವಗಳಿಗೆ ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬೋಧಿಸಿದ ಸಂವಿಧಾನಾತ್ಮಕ ಮೌಲ್ಯಗಳಿಗೆ ಅಪಮಾನವಾಗುವಂತಹ ಇಂತಹ ಘಟನೆಗಳು ನಡೆದಿರುವುದರ ಬಗ್ಗೆ ಸಚಿವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.


ಸಾರ್ವಜನಿಕ ಕಾರ್ಯಕ್ರಮಗಳು, ಜಯಂತಿ ಉತ್ಸವಗಳ ಸಂದರ್ಭದಲ್ಲಿ ಯಾವುದೇ ರೀತಿಯ ಜನಾಂಗೀಯ ಉದ್ವಿಗ್ನತೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಮುಗ್ಧ ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.


ಖುದಾವಂದಪೂರ ಘಟನೆಯ ಕುರಿತು ಸಚಿವರು ತೀವ್ರ ಖಂಡನೆ ವ್ಯಕ್ತಪಡಿಸಿ, “ಬೀದರ್ ಶಾಂತಿಯ ತೋಟ. ಇಲ್ಲಿನ ಸೌಹಾರ್ದತೆಯ ವಾತಾವರಣಕ್ಕೆ ಧಕ್ಕೆಯಾಗದಂತೆ ಪ್ರತಿಯೊಬ್ಬರೂ ಜವಾಬ್ದಾರಿ ಹೊತ್ತು ನಡೆದುಕೊಳ್ಳಬೇಕು. ವೈಯಕ್ತಿಕ ವಿಚಾರಗಳನ್ನು ಸಾರ್ವತ್ರೀಕರಣ ಮಾಡುವ ಪ್ರಯತ್ನದಿಂದ ಶಾಂತಿ ಕದಡುವಂತಾಗಬಾರದು. ಒಂದು ಕಿಡಿಯನ್ನು ನಿರ್ಲಕ್ಷಿಸಿದರೆ ಅದು ಬೆಂಕಿಯ ಜ್ವಾಲೆಯಾಗುತ್ತದೆ,” ಎಂದು ತಿಳಿಸಿದ್ದಾರೆ.


ಮುಂದೆ ಇಂತಹ ಘಟನೆಗಳು ಮರುಕಳಿಸಿದರೆ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯನ್ನೇ ನೇರವಾಗಿ ಹೊಣೆ ಮಾಡಲಾಗುವುದು ಎಂಬ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.

Similar Posts

Leave a Reply

Your email address will not be published. Required fields are marked *