ಬೆಂಗಳೂರು.10.ಏಪ್ರಿಲ್.25:- ನಮ್ ದೇಶದಲ್ಲಿರುವ 1,215 ವಿಶ್ವ ವಿದ್ಯಾಲಯಗಳಲ್ಲಿ 70 % ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇವೆ. ಸರ್ಕಾರ ಖಾಲಿ ಇರುವ ಹುದೇ ಗಳು ಶೀಘ್ರದಲ್ಲೇ ಭರ್ತಿ ಮಾಡಬೇಕು ಎಂದು ರಾಜೀವಗಾಂಧಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎಸ್. ಚಂದ್ರಶೇಖರ ಶೆಟ್ಟಿ ಅವರು ಸರ್ಕಾರವನ್ನು ಹೇಳಿದ್ರು.
ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ(ಬಿಸಿಯು) ನಿರ್ಗಮಿತ ಕುಲಪತಿ ಪ್ರೊ. ಲಿಂಗರಾಜ ಗಾಂಧಿಯವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ಸರ್ಕಾರ, ಉನ್ನತ ಶಿಕ್ಷಣದ ಮುನ್ನಡೆಗೆ ಆಯವ್ಯಯದಲ್ಲಿ ಹೆಚ್ಚಿನ ಹಣಕಾಸಿನ ಬೆಂಬಲ ಒದಗಿಸಬೇಕಾದ ಅಗತ್ಯವಿದೆ’ ಎಂದು ಅವರು ಪ್ರತಿಪಾದಿಸಿದರು.
‘ಲಿಂಗರಾಜ ಗಾಂಧಿಯವರು, ಬಿಸಿಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸುವ ಮೂಲಕ, ವಿಶ್ವವಿದ್ಯಾಲಯದ ಪ್ರಗತಿಗೆ ಶ್ರಮಿಸಿದ್ದಾರೆ’ ಎಂದು ಶ್ಲಾಘಿಸಿದರು.
ಅಭಿನಂದನಾ ಭಾಷಣ ಮಾಡಿದ ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಕೆ. ಚಿದಾನಂದ ಗೌಡ ‘ಗ್ರಾಮೀಣ ಪ್ರದೇಶದಿಂದ ಬಂದ ಲಿಂಗರಾಜ ಗಾಂಧಿಯವರು, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಗಮನ ಹರಿಸಿದ್ದರು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ ಕೃಷ್ಣ ಮಾತನಾಡಿ, ‘ಸರ್ಕಾರಿ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಿಗೆ ಶೀಘ್ರ ಕಾಯಂ ಬೋಧಕರನ್ನು ನೇಮಕ ಮಾಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
‘ನಾಲ್ಕು ದಶಕಗಳಿಂದ ಉನ್ನತ ಶಿಕ್ಷಣ ಕ್ಷೇತ್ರದ ವಿವಿಧ ಹುದ್ದೆಗಳಲ್ಲಿ ಪ್ರೊ. ಲಿಂಗರಾಜ ಗಾಂಧಿಯವರು ಉತ್ತಮ ಕೆಲಸ ಮಾಡಿದ್ದಾರೆ’ ಎಂದು ಶ್ಲಾಘಿಸಿದರು.
ಸಮಾರಂಭದಲ್ಲಿ ಪ್ರೊ.ಲಿಂಗರಾಜ ಗಾಂಧಿ ಮತ್ತು ಸೌಮ್ಯ ಗಾಂಧಿ ದಂಪತಿಯನ್ನು ಅಭಿನಂದಿಸಲಾಯಿತು.
ಮಾಜಿ ಶಿಕ್ಷಣ ಸಚಿವರಾದ ಪ್ರೊ. ಬಿ.ಕೆ. ಚಂದ್ರಶೇಖರ್, ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು, ಬಿಸಿಯು ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು, ಬಿಸಿಯು ಕುಲಸಚಿವ (ಮೌಲ್ಯಮಾಪನ) ಪ್ರೊ. ಬಿ.ರಮೇಶ್, ಕುಲಸಚಿವ ಟಿ. ಜವರೇಗೌಡರು, ವಿತ್ತಾಧಿಕಾರಿ ಎಂ.ವಿ. ವಿಜಯಲಕ್ಷ್ಮಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.