14 ಡಿಸೆಂಬರ್ 24 ಬೀದರ್ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ನಿರಂತರವಾಗಿ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ದಲಿತರ ಮೇಲಿನ ದೌರ್ಜನ್ಯವನ್ನು ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಜಿಲ್ಲಾಡಳಿತವು ಜಿಲ್ಲಾ ಉಸ್ತುವಾರಿ ಸಚಿವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಫೆಬ್ರುವರಿ 9ರಂದು ಭಾಲ್ಕಿ ತಾಲೂಕಿನ ಮಳಚಾಪೂರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಕೆಲವು ಕಿಡಿಗೇಡಿಗಳು ಅಡ್ಡಿಯುಂಟು ಮಾಡಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು. ಇದುವರೆಗೆ ಅವರನ್ನು ಬಂಧಿಸಿಲ್ಲ ಎಂದು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಕುಮ್ಮಕ್ಕು ನೀಡುತ್ತಿದ್ದು, ಅವರನ್ನು ಸಂಪುಟದಿಂದ ಕೈಬಿಡಬೇಕು’ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಜ್ಞಾನೇಶ್ವರ ಸಿಂಗಾರೆ ಒತ್ತಾಯಿಸಿದರು.
2023ರ ನವೆಂಬರ್ನಲ್ಲಿ ಭಾಲ್ಕಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪದಗಳೊಂದಿಗೆ ಪೋಸ್ಟ್ ಮಾಡಿ ಅವಮಾನಿಸಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಬಂಧಿಸಿಲ್ಲ. ಹುಮನಾಬಾದ್ ತಾಲ್ಲೂಕಿನ ಹುಣಸಗೇರಾದಲ್ಲಿ ಈ ಸಾಲಿನ ಜನವರಿಯಲ್ಲಿ ಹುಡುಗನೊಬ್ಬ ವಾಟ್ಸ್ಯಾಪ್ನಲ್ಲಿ ಅಂಬೇಡ್ಕರ್ ಅವರ ಚಿತ್ರ ಸ್ಟೇಟಸ್ ಹಾಕಿದ್ದಕ್ಕೆ ಕೆಲ ಕಿಡಿಗೇಡಿಗಳು ಥಳಿಸಿ, ಬಲವಂತವಾಗಿ ಜೈಶ್ರೀರಾಮ್ ಘೋಷಣೆ ಹಾಕಿಸಿದ್ದಾರೆ. ಇದುವರೆಗೆ ಪೊಲೀಸರು ಯಾವುದೇ ಕ್ರಮ ಜರುಗಿಸಿಲ್ಲ ಎಂದು ದೂರಿದರು.
ಫೆಬ್ರುವರಿಯಲ್ಲಿ ಔರಾದ್ ತಾಲ್ಲೂಕಿನ ಕೌಡಗಾಂವ್ ಮುಖ್ಯರಸ್ತೆಯಲ್ಲಿ 40 ವರ್ಷಗಳಿಂದ ಅಂಬೇಡ್ಕರ್ ಮೂರ್ತಿ ಇದೆ. ಕೆಲ ಕಿಡಿಗೇಡಿಗಳು ಅದರ ಬಳಿ ಬಸವಣ್ಣನವರ ಭಾವಚಿತ್ರವಿಟ್ಟು ಎರಡು ಜಾತಿಗಳ ಮಧ್ಯೆ ಘರ್ಷಣೆಗೆ ಕಾರಣರಾಗಿದ್ದಾರೆ. ಇತ್ತೀಚೆಗೆ ಭಾಲ್ಕಿ ತಾಲ್ಲೂಕಿನ ಚಳಕಾಪೂರದಲ್ಲಿ ದಲಿತರ ಓಣಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಸಚಿವರ ಕುಮ್ಮಕ್ಕಿನಿಂದ 109 ಜನ ದಲಿತರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಆರೋಪಿಸಿದರು.
ಪಕ್ಷದ ಜಿಲ್ಲಾ ಅಧ್ಯಕ್ಷ ಕಪಿಲ ಗೋಡಬೊಲೆ ಮಾತನಾಡಿ, ತಾಲ್ಲೂಕಿನ ವಿಳಾಸಪೂರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದೆ. ಚಾಂಬೋಳ ಗ್ರಾಮದಲ್ಲಿ ಅಂಬೇಡ್ಕರ್ ವೃತ್ತವನ್ನು ತೆರವುಗೊಳಿಸಲಾಗಿದೆ. ಆದರೆ, ಕಿಡಿಗೇಡಿಗಳನ್ನು ಬಂಧಿಸಿಲ್ಲ. ಜಿಲ್ಲೆಯ ದಲಿತರು, ಹಿಂದುಳಿದವರು ಸುಮಾರು 50 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದಾರೆ. ಅವರ ಜಮೀನು ಕಸಿಯುವ ಹುನ್ನಾರ ನಡೆಸಲಾಗುತ್ತಿದೆ. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಕುಮ್ಮಕ್ಕಿದೆ. ಸಚಿವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು. ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪಕ್ಷದ ರಾಜ್ಯ ಕಾರ್ಯದರ್ಶಿ ಅಶೋಕ ಮಂಠಾಳಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ ಬಾವಿದೊಡ್ಡಿ, ಬೀದರ್ ದಕ್ಷಿಣ ತಾಲ್ಲೂಕು ಘಟಕದ ಅಧ್ಯಕ್ಷ ಸತೀಶ ದೊಡ್ಡಿ, ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಪ್ರದೀಪ ಫುಲೆ, ಬೀದರ್ ಉತ್ತರ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ ಪೋಲಾ, ಬಸವಕಲ್ಯಾಣ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರ ಪುಲೆ, ರಜನಿಕಾಂತ ನಾಯಕ ಹಾಜರಿದ್ದರು.