10/06/2025 3:15 AM

Translate Language

Home » ಲೈವ್ ನ್ಯೂಸ್ » ಪತ್ರಕರ್ತನ ಮೇಲೆ ಹಲ್ಲೆ, ಜಾತಿ ನಿಂದನೆ: ಅಧಿಕಾರಿ ಅಮಾನತು

ಪತ್ರಕರ್ತನ ಮೇಲೆ ಹಲ್ಲೆ, ಜಾತಿ ನಿಂದನೆ: ಅಧಿಕಾರಿ ಅಮಾನತು

Facebook
X
WhatsApp
Telegram

ಬೀದರ.18.ಏಪ್ರಿಲ್.25:- ಅರಣ್ಯ ಇಲಾಖೆಯ ಅರಣ್ಯ ಪಾಲಕ ದಸ್ತಗಿರಿ ಸಾಬ್‌ ಅವರು ಪತ್ರಕರ್ತನ ಮೇಲೆ ಹಲ್ಲೆ ನಡೆಸಿ ಮತ್ತು ಜಾತಿ ನಿಂದನೆ ಮಾಡಿ ಅಶಿಸ್ತಿನಿಂದ ವರ್ತಿಸಿದ ಆರೋಪದ ಮೇರೆಗೆ ಹೊನ್ನಿಕೇರಿ ಗಸ್ತು ಅರಣ್ಯ ಪಾಲಕ ಎಂಬುವರನ್ನು ಅಮಾನತುಗೊಳಿಸಿ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಮ್‌.ಎಮ್‌.ಆದೇಶ ಹೊರಡಿಸಿದ್ದಾರೆ.

ವರದಿ ಮಾಡಲು ಹೋಗಿದ್ದ ಪತ್ರಕರ್ತ ರವಿ ಬಸವರಾಜ ಬೋಸುಂಡೆ ಅವರ ಮೇಲೆ ಹಲ್ಲೆ ಮಾಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ದಸ್ತಗಿರಿ ಸಾಬ ಅವರನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಇಲಾಖಾ ವಿಚಾರಣೆ ಬಾಕಿ ಇರಿಸಿ, ಕರ್ನಾಟಕ ಸಿವಿಲ್‌ (ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1) (ಡಿ) ಅನ್ವಯ ಗುರುವಾರ (ಏ.17) ಆದೇಶಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ದೃಶ್ಯಾವಳಿಗಳು ಹಾಗೂ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿ ಆಧರಿಸಿ ಈ ಕ್ರಮ ಜರುಗಿಸಲಾಗಿದೆ. ಕರ್ತವ್ಯ ನಿರ್ವಹಿಸುವಾಗ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಕರ್ನಾಟಕ ನಾಗರಿಕ ಸೇವಾ ನಡತೆ ನಿಯಮಗಳು 2021ರ ನಿಯಮ (3) ಉಲ್ಲಂಘಿಸಿ ಕರ್ತವ್ಯದಲ್ಲಿ ಅಶಿಸ್ತು ತೋರಿದ್ದಾರೆ. ಸದರಿ ಘಟನೆಯ ಬಗ್ಗೆ ಕೂಲಂಕಶ ತನಿಖೆ ನಡೆದು, ಪ್ರಕರಣದ ಸತ್ಯಾಸತ್ಯತೆ ತಿಳಿಯಬೇಕಾಗಿದೆ. ದಸ್ತಗಿರಿ ಸಾಬ್‌ ಅದೇ ಸ್ಥಳದಲ್ಲಿ ಕೆಲಸ ನಿರ್ವಹಿಸಲು ಅವಕಾಶ ಮಾಡಿಕೊಟ್ಟರೆ ನಿಷ್ಪಕ್ಷಪಾತ ತನಿಖೆಗೆ ಅಡ್ಡಿಯಾಗುವ ಸಂಭವವಿದೆ. ಈ ಕಾರಣಕ್ಕಾಗಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಆಗಿದ್ದೇನು?

ಏ. 15ರಂದು ರಾತ್ರಿ 9ರ ಸುಮಾರಿಗೆ ರವಿ ಭೂಸಂಡೆ ಅವರು ಚಿದ್ರಿ ಮಾರ್ಗವಾಗಿ ಹೋಗುತ್ತಿದ್ದರು. ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಯೊಂದಿಗೆ ಸಾರ್ವಜನಿಕರ ವಾಗ್ವಾದ ನಡೆದಿತ್ತು. ಏನಾಗುತ್ತಿದೆ ಎಂದು ನೋಡಲು ಹೋಗಿದ್ದ ರವಿ ಅವರ ಮೇಲೆ ಅರಣ್ಯ ಇಲಾಖೆಯ ದಸ್ತಗಿರಿ ಸಾಬ್‌, ಶಾಂತಕುಮಾರ, ಗಜಾನಂದ ಹಾಗೂ ಸಂಗಮೇಶ ಎಂಬುವರು ಹಲ್ಲೆ ನಡೆಸಿದ್ದಾರೆ.

ಜಾತಿ ನಿಂದನೆ ಮಾಡಿ, ಖಾಸಗಿ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದರು. ರವಿ ನೀಡಿದ ದೂರಿನನ್ವಯ ಈ ಸಂಬಂಧ ನಾಲ್ವರ ವಿರುದ್ಧ ಗಾಂಧಿಗಂಜ್‌ ಪೊಲೀಸ್‌ ಠಾಣೆಯಲ್ಲಿ ಏ. 16ರಂದು ಪ್ರಕರಣ ದಾಖಲಾಗಿತ್ತು.

ಘಟನೆಯ ನಂತರ ಪತ್ರಕರ್ತರು ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಸಿದ್ದರು. ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿ, ಪತ್ರಕರ್ತನ ಮೇಲೆ ಹಲ್ಲೆ ನಡೆಸಿದವರನ್ನು ಅಮಾನತುಗೊಳಿಸಿ, ಬಂಧಿಸಬೇಕೆಂದು ಆಗ್ರಹಿಸಿದ್ದರು.

ಇದಾದ ಕೆಲವೇ ಗಂಟೆಗಳಲ್ಲಿ ಅರಣ್ಯ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಬರೆದು, ಅರಣ್ಯ ಇಲಾಖೆಯ ಸಿಬ್ಬಂದಿ ವಿರುದ್ಧ ಕೂಡಲೇ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಬೇಕೆಂದು ನಿರ್ದೇಶನ ನೀಡಿದ್ದರು. ಅದಾದ ಬಳಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಮಾನತು ಆದೇಶ ಹೊರಡಿಸಿದ್ದಾರೆ.

ಪತ್ರಕರ್ತರ ಸಂಘದಿಂದ ಸ್ವಾಗತ:

‘ಪತ್ರಕರ್ತನ ಮೇಲೆ ಹಲ್ಲೆ ನಡೆಸಿ, ಅನುಚಿತವಾಗಿ ನಡೆದುಕೊಂಡಿರುವ ಅರಣ್ಯ ಇಲಾಖೆಯ ಅಧಿಕಾರಿ ದಸ್ತಗಿರಿ ಸಾಬ್‌ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವುದು ಸ್ವಾಗತಾರ್ಹ. ಪತ್ರಕರ್ತರ ಮನವಿಗೆ ಓಗೊಟ್ಟು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ತುರ್ತಾಗಿ ಸ್ಪಂದಿಸಿ ಕ್ರಮ ಕೈಗೊಂಡಿರುವುದು ಪತ್ರಕರ್ತರಿಗೆ ಸಂತಸ ತಂದಿದೆ.

ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ಜರುಗದಂತೆ ಸಂಬಂಧಿಸಿದವರಿಗೆ ನಿರ್ದೇಶನ ನೀಡಬೇಕು. ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೀದರ್‌ ಜಿಲ್ಲಾಧ್ಯಕ್ಷ ಡಿ.ಕೆ. ಗಣಪತಿ ಆಗ್ರಹಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!