ಬೀದರ.09.ಏಪ್ರಿಲ್.25:- ಇದೇ ಏಪ್ರಿಲ್.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ತಿಳಿಸಿದ್ದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏಪ್ರಿಲ್.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವು ಕೂಡ ಎಲ್ಲಾ ಸರ್ಕಾರಿ-ಅರೆ ಸರ್ಕಾರಿ ಕಚೇರಿಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದು, ನಂತರ ಬೆಳಿಗ್ಗೆ 9 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ನಡೆಯುವ ಪೂಜೆ ಹಾಗೂ ಮಾಲಾರ್ಪಣೆ ಕಾರ್ಯಕ್ರಮ ನೆರವೇರಿಸಿ ನಂತರ ಅಂಬೇಡ್ಕರ ಅವರ ಭಾವಚಿತ್ರದ ಮೆರವಣಿಗೆ ನಗರದ ಭಗತಸಿಂಗ ಚೌಕ, ಬಸವೇಶ್ವರ ಚೌಕ, ನಯಾಕಮಾನ, ಚೌಬಾರಾ, ಗವಾನ ಚೌಕ ಮಾರ್ಗದ ಮೂಲಕ ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಮೂಲಕ ತೆರಳಿ ಮೆರವಣಿಗೆ ಮುಕ್ತಾಯಗೊಳಿಸುವುದು. ನಂತರ ಸಾಯಂಕಾಲ 5 ಗಂಟೆಗೆ ಶಿವಾಜಿ ವೃತ್ತದ ಹತ್ತಿರದಲ್ಲಿ ಜಿಲ್ಲಾಡಳಿತ ವತಿಯಿಂದ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ನೀಡುವರು ಎಂದು ಹೇಳಿದರು.
ವಿವಿಧ ಗ್ರಾಮಗಳಿಂದ ಆಗಮಿಸುವ ಸಾರ್ವಜನಿಕರಿಗೆ ಬಸ್ಸುಗಳ ವ್ಯವಸ್ಥೆ ಹಾಗೂ ಮೆರವಣಿಗೆ ನಡೆಯುವ ಸ್ಥಳಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಚತೆ ಕಾಪಾಡುವಂತೆ ನಗರಸಭೆ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತ ಮತ್ತು ಸಂಚಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.
ಆರೋಗ್ಯ ಇಲಾಖೆಯಿಂದ ಮೆರವಣಿಗೆಯಲ್ಲಿ ಅಂಬುಲೈನ್ಸ್ ವ್ಯವಸ್ಥೆ ಮಾಡಬೇಕೆಂದರು. ವಿವಿಧ ಇಲಾಖೆಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಸಕಾಲದಲ್ಲಿ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ , ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸಿಂಧು ಎಚ್.ಎಸ್, ಮುಖಂಡರಾದ ಮಾರುತಿ ಬೌದ್ಧೆ, ಸುಧಾಕರ ಏಕಬೇಕರ್, ರಾಜಶೇಖರ ಬನಾಳೆ, ಸಂತೋಷ ಜೊಳದಪಕೆ, ವಿನೋದ ಬಂದಗೆ , ಅಭಿ ಕಾಳೆ, ಬಾಬುರಾವ ಮುಲಕಾಪೂರೆ, ಜಾನಪದ ಅಕಾಡೆಮಿ ಸದಸ್ಯರಾದ ವಿಜಯಕುಮಾರ ಸೋನಾರೆ, ಮತ್ತು ಇತರೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.