ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ, ಕಾನೂನು ಅರಿವು-ನೆರವು ಕಾರ್ಯಕ್ರಮ
ಕೊಪ್ಪಳ.13.ಜೂನ್.26: ಕಡ್ಡಾಯ ಶಿಕ್ಷಣ ಪ್ರತಿಯೊಬ್ಬ ಮಗುವಿನ ಕಾನೂನುಬದ್ಧವಾದ ಹಕ್ಕಾಗಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವುದರಿಂದ ಮಾತ್ರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಕೊಪ್ಪಳ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರಾದ ಡಾ. ಸುರೇಶ ಬಿ. ಇಟ್ನಾಳ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ (ಜೂ. 12ರಂದು) ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಆಯೋಜಿಸಲಾಗಿದ್ದ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ” ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿಯು ಒಂದು ಸಾಮಾಜಿಕ ಪೀಡುಗಾಗಿದ್ದು, ಇದರಿಂದ ಮಕ್ಕಳ ಶಿಕ್ಷಣದ ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ಇದಕ್ಕಾಗಿ ಶಿಕ್ಷಣ ಇಲಾಖೆಯ ಪಾತ್ರ ಬಹು ಮುಖ್ಯವಾಗಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು. ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ ಅಂಗನವಾಡಿ ಕೇಂದ್ರಗಳಿAದ ಪ್ರಾಥಮಿಕ ಶಾಲೆಗಳಿಗೆ ಮಕ್ಕಳು ಪ್ರತಿ ವರ್ಷ ದಾಖಲಾಗುತ್ತಿದ್ದಾರೆಯೇ ಎಂಬುದರ ಬಗ್ಗೆ ಪರಿಶೀಲಿಸಬೇಕು. ಪ್ರಾಥಮಿಕ ಶಾಲಾ ಹಂತದ ಬಳಿಕ ಮುಂದಿನ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಶಿಕ್ಷಣ ಹಂತಕ್ಕೆ ದಾಖಲಾಗುತ್ತಿದ್ದಾರೆಯೇ ಎಂಬುದನ್ನು ಸಹ ಪರಿಶೀಲಿಸಬೇಕು. ಶಾಲೆ ಬಿಟ್ಟ ಮಕ್ಕಳನ್ನು ಪತ್ತೆ ಮಾಡಿ ಅವರಿಗೆ ಪುನಃ ಶಾಲೆಗೆ ಸೇರಿಸುವ ಕೆಲಸವಾಗಬೇಕು. ಅಂದಾಗ ಮಾತ್ರ ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟಿದಂತಾಗುತ್ತದೆ ಎಂದರು.
14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುತ್ತಿರುವುದೇ ಬಾಲಕಾರ್ಮಿಕ ಪದ್ಧತಿಯಾಗಿದೆ.
ಇದರಿಂದ ಮಕ್ಕಳ ಬಾಲ್ಯವನ್ನು ಕಸಿದುಕೊಂಡಂತಾಗುತ್ತದೆ. ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಯಾವುದೇ ಕ್ಷೇತ್ರಗಳಲ್ಲಿ ಮಕ್ಕಳನ್ನು ದುಡಿಸಿಕೊಳ್ಳುತ್ತಿರುವುದು ಕಂಡುಬಂದಲ್ಲಿ ಕೂಡಲೇ ನಾವೆಲ್ಲರೂ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಮೂಲಕ ದೂರು ನೀಡಿ, ಮಕ್ಕಳ ರಕ್ಷಣೆ ಮಾಡಬೇಕು. ಈ ಬಗ್ಗೆ ವಿಶೇಷವಾಗಿ ಮಕ್ಕಳು ತಮ್ಮ ಸಹಪಾಟಿಗಳನ್ನು ರಕ್ಷಿಸಲು ನಿರ್ಭಯವಾಗಿ ದೂರು ನೀಡಲು ಮುಂದೆ ಬರಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳು ಬಾಲಕಾರ್ಮಿ ಪದ್ಧತಿಯ ಬಗ್ಗೆ ಅರಿತುಕೊಂಡು, ಇದರ ಬಗ್ಗೆ ಕನಿಷ್ಠ ಮೂರು ಜನರಿಗೆ ತಿಳುವಳಿಕೆ ನೀಡಬೇಕು ಎಂದು ಮಕ್ಕಳಿಗೆ ಕರೆ ನೀಡಿದರು.
ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಅವರು ಮಾತನಾಡಿ, ಮಕ್ಕಳು ಅನುಭವಿಸಬೇಕಾದಂತಹ ಹಕ್ಕುಗಳನ್ನು ಕೊಡುವುದು ಮಕ್ಕಳ ತಂದೆ-ತಾಯಿ ಮತ್ತು ಸಮಾಜದಲ್ಲಿನ ಪ್ರತಿಯೊಬ್ಬರ ಕರ್ತವ್ಯವಾಗಿದೆ. 14 ವರ್ಷದವರೆಗೆ ಮಕ್ಕಳಿಗೆ ಊಟ, ಆಟ, ಪಾಠವನ್ನು ಅವರ ಇಚ್ಛೆಯಂತೆ ನೀಡಬೇಕು. ಮಕ್ಕಳು ತಮ್ಮ ಬಾಲ್ಯದ ವಯಸ್ಸಿನಲ್ಲಿ ಹೇಗಿರಬೇಕೋ ಹಾಗೆಯೇ ಇರುವಂತೆ ನೋಡಿಕೊಳ್ಳಬೇಕು. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಂಡಲ್ಲಿ 2 ವರ್ಷ ಜೈಲು ಹಾಗೂ 50 ಸಾವಿರ ರೂ. ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಮಕ್ಕಳು ದೇಶದ ಭವಿಷ್ಯದ ಪ್ರಜೆಗಳಾಗಿರುವುದರಿಂದ ಅವರ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ನಮ್ಮ ಸಮಾಜವನ್ನು ರೂಪಿಸಬೇಕು. ಸಮಾಜದ ಅನಿಷ್ಟ ಪದ್ದತಿಯಾದ ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಎಲ್ಲರೂ ಶ್ರಮೀಸಬೇಕು ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಸುಧಾ ಗರಗ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬಾಲಕಾರ್ಮಿ ಪದ್ಧತಿಯಿಂದ ದೇಶದ ಅಭಿವೃದ್ಧಿ ಮತ್ತು ಮಾನವ ಅಭಿವೃದ್ಧಿ ಕುಂಠಿತವಾಗುತ್ತದೆ. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ಕಟ್ಟುನಿಟ್ಟಾಗಿ ಕೊನೆಗೊಳಿಸುವುದು ಎಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿವರ್ಷ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. “ಬಾಲ ಕಾರ್ಮಿಕ ಪದ್ಧತಿಯ ತಡೆ: ಮಕ್ಕಳಿಗೆ ನ್ಯಾಯಯುತ ಆಟ, ವಯಸ್ಕರಿಗೆ ಯೋಗ್ಯ ಕೆಲಸ” ಎಂಬುದು ಈ ವರ್ಷದ ಧ್ಯೇಯ ವಾಕ್ಯವಾಗಿದೆ ಎಂದು ತಿಳಿಸಿದರು.
ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರು ವಿಶ್ವ ಬಾಲಕಾರ್ಮಿಕ ವಿರೋಧಿ ದಿನ-2026ರ ಪ್ರಮಾಣ ವಚನ ಬೋಧಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಪರ ಉಪನಿರ್ದೇಶಕರಾದ ಅಮರೇಶ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಸಿಂಧು ಅಂಗಡಿ, ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ-ಯುನಿಸೆಫ್ ಕೊಪ್ಪಳ ಸಂಯೋಜಕರಾದ ಹರೀಶ ಜೋಗಿ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಿಹೊಂದಿ, ಶಾಲೆಗೆ ದಾಖಲಾಗಿ 10ನೇ ತರಗತಿಯಲ್ಲಿ ಶೇ 75ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ತಲಾ 2000ಗಳ ಪ್ರೋತ್ಸಾಹ ಧನ ಚೆಕ್ ನೀಡಲಾಯಿತು.
ಬಾಲಕಾರ್ಮಿಕತೆಯಿಂದ ಮುಕ್ತರಾದ ಮಕ್ಕಳಿಗೆ ಮಾಲೀಕರಿಂದ ಬಾಲಕಾರ್ಮಿಕ ಕಲ್ಯಾಣ ನಿಧಿಗೆ ವಸೂಲಿ ಮಾಡಿ ಜಮಾ ಮಾಡಿದ 20 ಸಾವಿರ ಕಾರ್ಪಸ್ ನಿಧಿ ಹಾಗೂ 15 ಸಾವಿರ ಸರ್ಕಾರದ ವಂತಿಕೆ ಸೇರಿ 35 ಸಾವಿರ ಮೌಲ್ಯದ ಬಾಂಡ್ಗಳನ್ನು ವಿತರಿಸಿ ಸನ್ಮಾನಿಸಲಾಯಿತು ಮತ್ತು ಇತರೆ ಬಾಲ ಕಾರ್ಮಿಕ ಮಕ್ಕಳಿಗೆ ಪರಿಹಾರ ಧನ ಚೆಕ್ ವಿತರಿಸಲಾಯಿತು.
ಸಮಾರಂಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸೋಮಶೇಖರಗೌಡ ಬಸನಗೌಡ ಪಾಟೀಲ್, ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ ಹೊಸಮನಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪ್ರಕಾಶ ಕಡಗದ, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಬಸವರಾಜ ಹಿರೇಗೌಡ್ರ, ಕೊಪ್ಪಳ ವೃತ್ತದ ಕಾರ್ಮಿಕ ನಿರೀಕ್ಷಕರಾದ ಮಂಜುಳಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ಮಕ್ಕಳು ಮತ್ತು ಮತ್ತಿತರರು ಉಪಸ್ಥಿತರಿದ್ದರು.






Any questions related to ಶಿಕ್ಷಣದಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ?