ಔರಾದ್ (ಬಾ): ಬೀದರ ಜೆಲ್ಲೆಯ ಔರಾದ ತಾಲೂಕಾ ಶಾಸಕ ಪ್ರಭು ಚವಾಣ್ ಅವರು ಗ್ರಾಮ ಸಂಚಾರದ ವೇಳೆ ಅನೇಕ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ್ದೇನೆ. 7-8ನೇ ತರಗತಿ ಮಕ್ಕಳಿಗೆ ಸರಿಯಾಗಿ ಓದಲು, ಬರೆಯಲು ಬರಲ್ಲ. ಪ್ರಾಥಮಿಕ ಹಂತದಲ್ಲಿ ಈ ರೀತಿ ಅವ್ಯವಸ್ಥೆಯಾದರೆ ಎಸ್ಎಸ್ಎಲ್ಸಿ ಫಲಿತಾಂಶ ಹೇಗೆ ಸುಧಾರಿಸುತ್ತದೆ’ ಎಂದು ಶಿಕ್ಷಣಾಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಔರಾದ್ ತಾಲ್ಲೂಕಿನ ಬೋಂತಿ ತಾಂಡಾದಲ್ಲಿ ಶನಿವಾರ ನಡೆದ ಶಿಕ್ಷಣ ಇಲಾಖೆಯ ಬಿಆರ್ಪಿ, ಸಿಆರ್ಪಿ, ಇಸಿಒಗಳ ಸಭೆಯಲ್ಲಿ ಮಾತನಾಡಿದ ಅವರು, ‘ಇನ್ನು ಮುಂದೆ ಏನು ಕ್ರಮ ಕೈಗೊಳ್ಳುತ್ತಿರೋ ಗೊತ್ತಿಲ್ಲ. ಶಿಕ್ಷಣ ವ್ಯವಸ್ಥೆ ಸುಧಾರಿಸಬೇಕು. ಮಕ್ಕಳ ದಾಖಲಾತಿ ಹೆಚ್ಚಿಸಬೇಕು’ ಎಂದು ತಾಕೀತು ಮಾಡಿದರು.
‘ಕೆಲ ಶಿಕ್ಷಕರು ಸಮಯಕ್ಕೆ ಸರಿಯಾಗಿ ಶಾಲೆಗೆ ಬರುತ್ತಿಲ್ಲ. ತಾಂಡಾಗಳ ಶಾಲೆ ಸ್ಥಿತಿಯಂತೂ ಹೇಳತೀರದಾಗಿದೆ. ಈಗ ಎಸ್ಎಸ್ಎಲ್ಸಿ ಪರೀಕ್ಷೆ ಸಮೀಪಿಸುತ್ತಿದೆ. ಎಲ್ಲರೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಪದೇಪದೆ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಬೇಕು. ಅಗತ್ಯ ಬಿದ್ದರೆ ಹೆಚ್ಚುವರಿ ತರಗತಿ ನಡೆಸಬೇಕು’ ಎಂದು ಸಲಹೆ ನೀಡಿದರು.
‘ನಿರಂತರವಾಗಿ ಸೂಚನೆ ನೀಡಿದರೂ ಸರ್ಕಾರಿ ಶಾಲೆಗಳ ಸ್ಥಿತಿ ಸುಧಾರಿಸದಿದ್ದರೆ ಇದಕ್ಕೆ ಕಾರಣರಾದ ಅಧಿಕಾರಿಗಳು, ಶಿಕ್ಷಕರನ್ನು ದೂರದ ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ರಂಗೇಶ, ಕ್ಷೇತ್ರ ಸಮನ್ವಯಾಧಿಕಾರಿ ಪ್ರಕಾಶ ರಾಠೋಡ್, ಪಂಢರಿ ಆಡೆ, ಧೂಳಪ್ಪ, ವಿದ್ಯಾಸಾಗರ, ವಿಶ್ವನಾಥ ಬಿರಾದಾರ, ಬಸವರಾಜ ಪಾಟೀಲ ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಇದ್ದರು.
ಶಾಸಕರು ಗ್ರಾಮ ಸಂಚಾರ್ ಮತ್ತು ಗ್ರಾಮ ವಾಸ್ತವ್ಯ ಮಡಿ ಜನರ ಸಮಸ್ಯೆಗಳಿಗೆ ಸ್ಪಂದಿಸ್ರು.