ಔರಾದ.26.ಜುಲೈ.25:- ಔರಾದ ಹಾಗೂ ಕಮಲನಗರ ತಾಲೂಕನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಜನತೆಗೆ ತೊಂದರೆಗಳಾಗುತ್ತಿದ್ದು, ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಶ್ರೀ. ಪ್ರಭು ಬಿ.ಚವ್ಹಾಣ ಅವರು ಸೂಚಿಸಿದ್ದಾರೆ.
ಔರಾದ(ಬಿ) ಹಾಗೂ ಕಮಲನಗರ ತಹಸೀಲ್ದಾರರಿಗೆ ದೂರವಾಣಿ ಮುಖಾಂತರ ಮಾತನಾಡಿರುವ ಶಾಸಕರು, ನಿರಂತರ ಮಳೆಯಿಂದಾಗಿ ಈಗಾಗಲೇ ಕೆಲವೆಡೆ ಮನೆ ಹಾನಿಯಾಗಿರುವ ಬಗ್ಗೆ ವರದಿಗಳಾಗಿವೆ. ತಮ್ಮ ಅಧೀನದಲ್ಲಿ ಬರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಜಬಾಬ್ದಾರಿಯಿಂದ ಕೆಲಸ ಮಾಡುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದ್ದಾರೆ.
ಇನ್ನು ಮಳೆಯಾಗುವ ಸಾಧ್ಯತೆಗಳಿರುವುದರಿಂದ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ಕೆಲಸ ಮಾಡಬೇಕು. ಮೊಬೈಲ್ ಫೋನ್ಗಳನ್ನು ಚಾಲ್ತಿಯಲ್ಲಿ ಇಟ್ಟುಕೊಂಡಿರಬೇಕು. ಸಾರ್ವಜನಿಕರಿಂದ ಬರುವ ಎಲ್ಲ ಕರೆಗಳಿಗೆ ಸ್ಪಂದಿಸಬೇಕೆಂದು ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಗ್ರಾಮ ಸೇವಕರು ಕಡ್ಡಾಯವಾಗಿ ಗ್ರಾಮಗಳಲ್ಲಿ ಕೆಲಸ ಮಾಡಬೇಕು. ಮನೆ ಹಾನಿಯಂತಹ ಘಟನೆಗಳು ನಡೆದಲ್ಲಿ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸರ್ಕಾರಕ್ಕೆ ನಿಖರವಾದ ವರದಿ ಸಲ್ಲಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆಗಳು ಅಗದಂತೆ ನೋಡಿಕೊಳ್ಳಬೇಕು
ಮಳೆಯಿಂದಾಗಿ ಮನೆಗಳ ಹಾನಿ, ಮನೆಗಳಿಗೆ ನೀರು ನುಗ್ಗುವುದು ಸೇರಿದಂತೆ ಯಾವುದೇ ರೀತಿಯ ಅವಘಡಗಳು ಆದಲ್ಲಿ ತಹಸೀಲ್ದಾರರ ಗಮನಕ್ಕೆ ತರಬೇಕು. ಲಿಖಿತವಾಗಿ ಪತ್ರ ನೀಡಿದಲ್ಲಿ ಅದರ ಒಂದು ಪ್ರತಿಯನ್ನು ನನ್ನ ಕಛೇರಿಗೆ ಸಲ್ಲಿಸಬೇಕೆಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
