Home » ಲೈವ್ ನ್ಯೂಸ್ » ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ಮೀಡಿಯಾ ಕಿಟ್: ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ಮೀಡಿಯಾ ಕಿಟ್: ಅರ್ಜಿ ಆಹ್ವಾನ

Facebook
X
WhatsApp
Telegram

ಕೊಪ್ಪಳ.20.ಆಗಸ್ಟ್.26: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಕಾರ್ಯನಿರತ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾಧ್ಯಮ ಮಾನ್ಯತೆ ಕಾರ್ಡ್ ಹೊಂದಿರುವ ಕಾರ್ಯನಿರತ ಪತ್ರಕರ್ತರಿಗೆ “2026-27ನೇ ಸಾಲಿಗೆ ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಆಯುಕ್ತರಾದ ಎಂ.ಎನ್. ಅನುಚೇತ್, ಐ.ಪಿ.ಎಸ್ ಅವರು ತಿಳಿಸಿದ್ದಾರೆ.


ಇಲಾಖೆಯ ಹವ್ಯಾಸಿ ಮಾನ್ಯತೆ ಕಾರ್ಡ್ ಹೊಂದಿರುವ ಪತ್ರಕರ್ತರು ಹಾಗೂ ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಾಗೂ ಸರ್ಕಾರದ ವ್ಯಾಪ್ತಿಗೆ ಒಳಪಡುವ ಅಕಾಡೆಮಿ/ನಿಗಮ/ಮಂಡಳಿ/ಇತ್ಯಾದಿ ಸರ್ಕಾರಿ ಸಂಸ್ಥೆಗಳಿಂದ ಈಗಾಗಲೇ ಮೀಡಿಯಾ ಕಿಟ್ ಪಡೆದಿರುವ ಕಾರ್ಯನಿರತ ಪತ್ರಕರ್ತರು ಮತ್ತೇ ಈ ಸಾಲಿನ ಮೀಡಿಯಾ ಕಿಟ್ ಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.


2026-27ನೇ ಸಾಲಿಗೆ ಮಾನ್ಯತೆ ಕಾರ್ಡ್ ಪಡೆದ ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರಿನಲ್ಲಿನ ಮಾನ್ಯತೆ ಹೊಂದಿದ ಪತ್ರಕರ್ತರು ಕೇಂದ್ರ ಕಚೇರಿಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಹಾಗೂ ಜಿಲ್ಲಾ ಪತ್ರಕರ್ತರು ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳುವುದು ಅಥವಾ ಇಲಾಖೆಯ ವೆಬ್‌ಸೈಟ್ https://dipr.karnataka.gov.in ನ ಸುದ್ದಿ ಮತ್ತು ಪತ್ರಿಕಾ ಶಾಖೆಯ ವೆಬ್‌ಸೈಟ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.


ದಿನಾಂಕ:10-09-2026 ರ ಸಂಜೆ 5:00 ಗಂಟೆಯೊಳಗೆ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕು. ಅರ್ಜಿಯಲ್ಲಿ ನಮೂದಿಸಲಾಗಿರುವ ಎಲ್ಲಾ ಮಾಹಿತಿಗಳಿಗೆ ಸೇವಾನುಭವಕ್ಕೆ ಅಧಿಕೃತ ಪೂರಕ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದೊಳಗಾಗಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.


ಇಲಾಖೆಯ ಮಾನ್ಯತಾ ಕಾರ್ಡು (Accriditation Card) ಹೊಂದಿರುವ ಕಾರ್ಯನಿರತ ಪತ್ರಕರ್ತರು ತಮ್ಮ ಹೆಸರು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸುವುದು.


ಅರ್ಜಿ ಸಲ್ಲಿಸ ಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 2026-27ನೇ ಸಾಲಿನಲ್ಲಿ ವಿತರಿಸಲಾಗಿರುವ ಮಾಧ್ಯಮ ಮಾನ್ಯತಾ ಕಾರ್ಡು ಹೊಂದಿರುವ ಬಗ್ಗೆ ದೃಢೀಕೃತ ಜೆರಾಕ್ಸ್ ಪ್ರತಿ, ಜಾತಿ ದೃಡೀಕರಣಕ್ಕಾಗಿ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು.


ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಾಗೂ ಸರ್ಕಾರದ ವ್ಯಾಪ್ತಿಗೆ ಒಳಪಡುವ ನಿಗಮ/ಮಂಡಳಿ/ಅಕಾಡೆಮಿ/ಸರ್ಕಾರದ ಯಾವುದೇ ಇಲಾಖೆಯಿಂದ ಸದರಿ ಯೋಜನೆಯಡಿ ಮಾಧ್ಯಮ ಕಿಟ್ ಗಳನ್ನು ಪಡೆದಿರುವುದಿಲ್ಲ ಎಂದು ರೂ. 100/200 ರ ಬಾಂಡ್ ನಲ್ಲಿ ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು.


ಮಾಧ್ಯಮ ಕಿಟ್ ಒದಗಿಸಲು ಪತ್ರಕರ್ತರ ಸೇವಾ ಹಿರಿತನ, ವಯೋಮಿತಿ ಹಾಗೂ ಸೇವಾನುಭವದ ಗರಿಷ್ಠತೆಯನ್ನು ಪರಿಗಣಿಸಲಾಗುವುದು. ಅರ್ಜಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ವಿವರ, ಪ್ರಸಾರ ಸಂಖ್ಯೆ, ಪತ್ರಿಕೆಯ ಮಾಧ್ಯಮ ಪಟ್ಟಿಯ ವಿವರ, ಜಾತಿ ಪ್ರಮಾಣ ಪತ್ರ, ಸೇವಾನುಭವ ಪತ್ರ, ವಿಳಾಸ ಹಾಗೂ ವಯಸ್ಸನ್ನು ದೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸುವುದು.


ಬೆಂಗಳೂರು ನಗರದಿಂದ ಅರ್ಜಿ ಸಲ್ಲಿಸುವ ಮಾಧ್ಯಮ ಪ್ರತಿನಿಧಿಗಳು ಕೇಂದ್ರ ಕಚೇರಿಯ ಸುದ್ದಿ ಮತ್ತು ಪತ್ರಿಕಾ ಶಾಖೆಗೆ ಸಲ್ಲಿಸುವುದು. ಲಕೋಟೆಯ ಮೇಲ್ಬಾಗದಲ್ಲಿ “ಮಾನ್ಯತೆ ಹೊಂದಿರುವ ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ಮೀಡಿಯಾ ಕಿಟ್ ”ಗಾಗಿ ಅರ್ಜಿ ಎಂದು ನಮೂದಿಸಿರಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿಗಳನ್ನು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯ ಸುದ್ದಿ ಮತ್ತು ಪತ್ರಿಕಾ ಶಾಖೆಯನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology