ಬೀದರ.13.ಫೆಬ್ರುವರಿ.25:-ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೀದರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇವರ ಸಂಯುಕ್ತ ಆಶ್ರಯದಲ್ಲಿ ಬೀದರ ತಾಲ್ಲೂಕಿನ ಅಲಿಯಂಬರ್ ಗ್ರಾಮದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಉದ್ಘಾಟಿಸಿದರು.
ನಂತರ ಮಾತನಾಡಿದ ಸಚಿವರು ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ಸಕಲ ಸೌಲಭ್ಯ ಕೌಶಲ್ಯಗಳನ್ನೊಳಗೊಂಡ ಶಿಕ್ಷಣ ನೀಡಲು ಸರಕಾರವು ಕಿತ್ತೂರರಾಣಿ ಚೆನ್ನಮ್ಮ ವಸತಿ ಶಾಲೆ ನಿರ್ಮಿಸಿದ್ದು ವಿದ್ಯಾರ್ಥಿನಿಯರು ಇದರ ಸದುಪಯೊಗ ಪಡೆದುಕೊಳ್ಳಬೇಕೆಂದರು.

ಇಡೀ ದೇಶ ಸ್ವಾತಂತ್ರ ಸಂಗ್ರಾಮದಲ್ಲಿ ಪ್ರಥಮ ಹೋರಾಟಗಾರ್ತಿಯಾಗಿದ್ದ ರಾಣಿ ಚೆನ್ನಮ್ಮಳ ಕಾರ್ಯ, ಧೈರ್ಯ, ತ್ಯಾಗದ ಬಗ್ಗೆ ಹೆಣ್ಣು ಮಕ್ಕಳು ತಿಳಿದುಕೊಂಡಿರಬೇಕು. ರಾಣಿ ಚೆನ್ನಮ್ಮಳಂತೆ ಧೈರ್ಯಶಾಲಿಗಳಾಗಿ ಉನ್ನತ ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವಂತೆ ಸಚಿವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್, ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.