ರಾಜ್ಯದ ಶಾಲೆಗಳಲಿ 13,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ನಗರದ ಬಿಪಿಎಸ್ಸಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡುವಲ್ಲಿ ನಮ್ಮ ಸರ್ಕಾರವು ಬದ್ಧವಾಗಿದೆ. ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿಶೇಷ ಜವಾಬ್ದಾರಿ ವಹಿಸಲಾಗಿದ್ದು, ಶಾಲಾ ಸಮಯ ಹೊರತುಪಡಿಸಿ, ಸಂಜೆ ಸಮಯದಲ್ಲೂ ಮಕ್ಕಳಿಗೆ ವಿಶೇಷ ತರಗತಿಗಳ ಮೂಲಕ ಅಭ್ಯಾಸಿಸಲು ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದರು.
ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ, ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳಿಗೆ ಪರೀಕ್ಷೆ ಎದುರಿಸಲು ಮೂರು ಬಾರಿ ಅವಕಾಶ ನೀಡಲಾಗಿದೆ. ಇಲ್ಲಿಯೂ ಉತ್ತೀರ್ಣರಾಗದಿದ್ದರೆ ಅಂತಹ ಮಕ್ಕಳಿಗೆ ಶಾಲೆಗಳಲ್ಲಿ ಪುನಃ ಪ್ರವೇಶಾತಿ ಪಡೆಯಲು ಅವಕಾಶ ನೀಡಲಾಗಿದೆ. ಅಲ್ಲಿಯೂ ಸಹ ಎಲ್ಲಾ ಮಕ್ಕಳಂತೆ ಬಟ್ಟೆ, ಪುಸ್ತಕ, ಶೂ ಹಾಗೂ ಇತರೆ ಸೌಲಭಗಳನ್ನು ಸಹ ನೀಡಲಾಗುತ್ತಿದೆ ಎಂದು ತಿಳಿಸಿದರು.
ಈಗಾಗಲೇ ರಾಜ್ಯದಲ್ಲಿ ಎರಡನೇ ಹಂತದ ಪರೀಕ್ಷೆಗಳು ಮುಕ್ತಾಯಗೊಂಡಿದ್ದು, ಇದರಲ್ಲಿ ಅನುತ್ತೀರ್ಣರಾದ ಮತ್ತು ಶೇಕಡವಾರು ಫಲಿತಾಂಶ ಹೆಚ್ಚಿಸಿಕೊಳ್ಳಲು ನೋಂದಾಯಿಸಿಕೊAಡ ಮಕ್ಕಳಲ್ಲಿ ಒಟ್ಟಾರೆ 84 ಸಾವಿರ ಮಕ್ಕಳು (ಶೇ.98.25 ರಷ್ಟು) ಉತ್ತೀರ್ಣರಾಗಿದ್ದಾರೆ ಎಂದು ಸಚಿವರು ವಿವರಿಸಿದರು.
ರಾಜ್ಯದ ಶಾಲೆಗಳಲ್ಲಿ ಮುಖಚಹರೆ ಆಧಾರಿತ ಹಾಜರಾತಿ ಕಡ್ಡಾಯವಾಗಿ ಮಾಡಲಾಗುತ್ತಿದ್ದು, ಈಗಾಗಲೇ ಈ ಕುರಿತು ಪ್ರಾಯೋಗಿಕ ಹಂತ ನಡೆಸಲಾಗಿದೆ ಎಂದರಲ್ಲದೇ, ಅಜೀಂ ಪ್ರೇಮ್ ಜೀ, ಇನ್ಫೋಸಿಸ್ ಹಾಗೂ ವಿವಿಧ ಸಂಸ್ಥೆಗಳ ಸಿಎಸ್ಆರ್ ಅನುದಾನ ಬಳಸಿಕೊಂಡು ಮಕ್ಕಳ ಆರೋಗ್ಯದ ಪೌಷ್ಟಿಕತೆ, ಗುಣಮಟ್ಟ ಶಿಕ್ಷಣಕ್ಕೆ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದವರು ಸಹ ಶಾಲೆಗೆ ಕೊಡುಗೆ ನೀಡಬೇಕು ಎಂದರು.
ದೇಶದ ಭವಿಷ್ಯವು ಮಕ್ಕಳ ಶಿಕ್ಷಣದ ಬುನಾದಿಯಲ್ಲಿದೆ. ಹಾಗಾಗಿ ನಮ್ಮ ಸರ್ಕಾರವು ಶಾಲೆಗಳಿಗೆ ಮೂಲಭೂತ ಸೌಕರ್ಯ, ಗುಣಮಟ್ಟ ಶಿಕ್ಷಣದ ಬೋಧನೆಗೆ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು. ಇದಕ್ಕೆ ಮುಖ್ಯಮಂತ್ರಿಯವರು ಸಮ್ಮತಿ ನೀಡಿದ್ದಾರೆ ಎಂದು ತಿಳಿಸಿದರು.