ಬೀದರ.22.ಜೂನ್.25:- ಉತ್ತಮ ಆರೋಗ್ಯವಂತ ಜೀವನಕ್ಕೆ ಯೋಗ ಬಹಳ ಮುಖ್ಯವಾಗಿರುವುದರಿಂದ ಇದನ್ನು ಯೋಗ ದಿನ ಮಾತ್ರ ಮಾಡದೆ ಪ್ರತಿದಿನ ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ತಿಳಿಸಿದರು.

ಅವರು ಶನಿವಾರ ನಗರದ ಕೋಟೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ, ಆಯುಷ್ ಇಲಾಖೆ, ಕ್ರಿಡಾ ಮತ್ತು ಯುವ ಸಬಲೀಕರಣ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯವೇ ಭಾಗ್ಯ ಅನ್ನುವ ಹಾಗೆ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಯೋಗವು ನಮ್ಮ ಪುರಾತನ ಪರಂಪರೆಯ ಒಂದು ಭಾಗವಾಗಿದೆ ಇದು ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಥಾನಮಾನ ಪಡೆದುಕೊಂಡಿದೆ.

ಯೋಗವು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದಾಗಿದೆ ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಮತ್ತು ಶಾಂತಿ, ನೆಮ್ಮದಿ ಜೀವನಕ್ಕೆ ಅನುಕೂಲಕರವಾಗಿದೆ ಎಂದರು.
ಕಲುಷಿತ ಆಹಾರ, ನೀರು, ಗಾಳಿಯಿಂದ ಆರೋಗ್ಯ ಮೇಲೆ ಅನೇಕ ಪರಿಣಾಮ ಬೀರುತ್ತದೆ ಆದ್ದರಿಂದ ನಮ್ಮ ಆರೋಗ್ಯ ನಾವು ನಮ್ಮ ಮೊದಲ ಆದ್ಯತೆ ಆಗಬೇಕು. ಯೋಗ ಕೇವಲ ಒಂದು ದಿನ ಮಾಡಿ ಬಿಡುವುದಲ್ಲ ದಿನನಿತ್ಯ ಯೋಗ ಮಾಡಬೇಕೆಂದು ತಿಳಿಸಿದರು.

ಬೀದರ ದಕ್ಷಿಣ ಶಾಸಕ ಡಾ. ಶೈಲೇಂದ್ರ ಕೆ.ಬೆಲ್ದಾಳೆ ಅವರು ಮಾತನಾಡಿ, ಯೋಗವು ನಮ್ಮ ದೇಶದ ಸಂಸ್ಕೃತಿ, ಆಚಾರ-ವಿಚಾರಗಳನ್ನು ಒಳಗೊಂಡಿದ ಉತ್ತಮ ಆರೋಗ್ಯದ ಆಚರಣೆಯಾಗಿದೆ. ಇಂದು ವಿಶ್ವದಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ನಮ್ಮ ಹೆಮ್ಮೆಯ ವಿಷಯವಾಗಿದೆ ಎಂದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಯೋಗ ಮಾಡುವುದರಿಂದ ನಮ್ಮ ಆರೋಗ್ಯದ ಜೊತೆಗೆ ಕೆಲಸ ಮಾಡುವ ಇಚ್ಛಾಶಕ್ತಿ ಹೆಚ್ಚಿಸುತ್ತದೆ ಹಾಗೂ ವ್ಯಕ್ತಿಯನ್ನು ಕ್ರಿಯಾಶೀಲನ್ನಾಗಿ ಮಾಡುತ್ತದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿ ಶಿವುಕುಮಾರ ಶೀಲವಂತ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾAತ ಪೂಜಾರಿ, ಜಿಲ್ಲಾ ಆಯುಷ್ ಅಧಿಕಾರಿ ಖುತೇಜಾ ಬೇಗಂ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ವಿವಿಧ ಶಾಲೆಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
