ಬೀದರ.30.ಜುಲೈ.25:- ಮಾನವ ಕಳ್ಳ ಸಾಗಾಣಿಕೆ ಸಮಾಜಕ್ಕೆ ಮಾರಕವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗಿರೀಶ್ ಬದೋಲೆ ಅವರು ತಿಳಿಸಿದರು.
ಅವರು ಬುಧವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಾನವ ಕಳ್ಳ ಸಾಗಾಣಿಕೆ ಒಂದು ಕಾನೂನು ಬಾಹಿರ ಮತ್ತು ಅಸಂವಿಧಾನಿಕ ಚಟುವಟಿಕೆಯಾಗಿದೆ. ಸಂವಿಧಾನದ 21ನೇ ವಿಧಿಯು ಭಾರತದ ಪ್ರತಿಯೊಬ್ಬ ಪ್ರಜೆಗಳಿಗೆ ಸ್ವಾತಂತ್ರ್ಯವಾಗಿ ಜೀವಿಸುವ ಹಕ್ಕು ನೀಡಿದೆ ಹಾಗೂ 23ನೇ ವಿಧಿಯು ಮಾನವ ಕಳ್ಳ ಸಾಗಾಣಿಕೆ ಅಪರಾಧ ಎಂದು ತಿಳಿಸುತ್ತದೆ. ಭಾರತ ಸರ್ಕಾರವು ಮಾನವ ಕಳ್ಳ ಸಾಗಾಣಿಕೆ ತಡೆ ಕಾಯ್ದೆ 1956 ನ್ನು ಜಾರಿಗೆ ತಂದಿದೆ. ಆದರೂ ಕೂಡ ಮಾನವ ಕಳ್ಳ ಸಾಗಾಣಿಕೆ ಆಗುತ್ತಿರುವುದು ಗಂಭೀರದ ವಿಷಯವಾಗಿದೆ ಎಂದರು.
ಕಾಣೆಯಾದವರ ಬಗ್ಗೆ ದೂರ ನೀಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾವಲು ಸಮಿತಿ ಇರುತ್ತದೆ ಅಲ್ಲಿ ಕೂಡ ದೂರ ನೀಡಬಹುದು ಮತ್ತು ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾವಾಗಲೂ ಸಾರ್ವಜನಿಕರ ಸಹಾಯಕ್ಕೆ ಇರುತ್ತದೆ. ಮಾನವ ಕಳ್ಳ ಸಾಗಾಣಿಕೆಯನ್ನು ತಡೆದು ಮಾನವ ಕಳ್ಳ ಸಾಗಾಣಿಕೆ ಮುಕ್ತ ಜಿಲ್ಲೆಯಾಗಲು ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಮಾತನಾಡಿ, ಮಾನವ ಕಳ್ಳ ಸಾಗಾಣಿಕೆಯಲ್ಲಿ ಮಹಿಳೆಯರು, ಮಕ್ಕಳು ಮತ್ತು ಇತರರು ಒಳಗೊಡಿರುತ್ತಾರೆ. ಮಹಿಳೆಯರನ್ನು ಬೇರೆ ಸ್ಥಳಗಳಿಗೆ ಸಾಗಾಣಿಕೆ ಮಾಡಿ ವೇಶ್ಯಾವಾಟಿಕೆ ಅಂತಹ ಸಮಾಜದ ಕೆಟ್ಟ ಚಟುವಟಿಕೆಗಳಲ್ಲಿ ಬಳಸಿಕೊಳ್ಳುತ್ತಿದ್ದಾರೆ ಮತ್ತು ಮಕ್ಕಳನ್ನು ಭಿಕ್ಷಾಟನೆಯಲ್ಲಿ ಹಾಗೂ ಇತರರನ್ನು ದೇಹದಲ್ಲಿ ಇರುವ ಅಂಗಾoಗಗಳನ್ನು ತೆಗೆದುಕೊಂಡು ಬೇರೆಯವರಿಗೆ ಮಾರಾಟ ಮಾಡುತ್ತಾರೆ ಮತ್ತು ಕಾರ್ಖಾನೆಗಳಲ್ಲಿ ಕೆಲಸಕ್ಕೆ ಬಳಸಿಕೊಳ್ಳುತ್ತಾರೆ. ಆದ್ದರಿಂದ ಇಂತಹ ಹೀನ ಕೃತ್ಯಗಳಿಂದ ಜನರನ್ನು ಕಾಪಾಡಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ್ ಅರ್ಜುನ್ ಬನಸೋಡೆ ಅವರು ಮಾತನಾಡಿ, ಮಾನವ ಕಳ್ಳ ಸಾಗಾಣಿಕೆಯಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಹೆಚ್ಚು ಸಾಗಾಣಿಕೆ ಮಾಡುತ್ತಾರೆ ಮಹಿಳೆಯರನ್ನು ಅನೈತಿಕ ಚಟುವಟಿಕೆಗಳಲ್ಲಿ ಮತ್ತು ಮಕ್ಕಳನ್ನು ಭಿಕ್ಷಾಟನೆ, ಬಾಲ ಕಾರ್ಮಿಕ ಅಂತಹ ಕೃತ್ಯಗಳಲ್ಲಿ ಬಳಸಿಕೊಳ್ಳುತ್ತಿದ್ದಾರೆ ಆದ್ದರಿಂದ ಇಂತಹ ಹೀನ ಕೃತ್ಯಗಳಿಂದ ಮಕ್ಕಳನ್ನು ಮತ್ತು ಮಹಿಳೆಯರನ್ನು ಕಾಪಾಡಬೇಕು ಹಾಗೂ ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು. ಕೆಲವು ಸಂದರ್ಭಗಳಲ್ಲಿ ಕಾಣೆಯಾದರು ಕೂಡ ಪೋಷಕರು ಒಂದು ವಾರದ ನಂತರ ಬರಬಹುದು, ಒಂದು ತಿಂಗಳ ನಂತರ ಬರಬಹುದು ಅಥವಾ 1 ವರ್ಷದ ನಂತರ ಬರಬಹುದು ಎಂದು ನಿರ್ಲಕ್ಷ್ಯ ವಹಿಸುತ್ತಾರೆ. ಇದು ಪೋಷಕರು ಮಾಡುವ ಅತಿ ದೊಡ್ಡ ತಪ್ಪಾಗಿರುತ್ತದೆ. ಕಾಣೆಯಾದ ತಕ್ಷಣ ಸಮೀಪದ ಪೋಲಿಸ್ ಠಾಣೆಗೆ ದೂರ ದಾಖಲಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ನ್ಯಾಯಾಧೀಶರು ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯ ಅಂಗವಾಗಿ ಪ್ರಮಾಣ ವಚನ ಬೋಧಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ನ್ಯಾಯಾವಾದಿ ಬಸವರಾಜ ಬುಳಾ ಮತ್ತು ಬಿ. ಎಸ್. ಪಾಟೀಲ ಅವರು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಶ್ರೀಧರ್ ಎಮ್.ಎಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ್, ಡಾನ್ ಬಾಸ್ಕೋ ಸ್ವಯಂ ಸೇವಾ ಸಂಸ್ಥೆಯ ನಿರ್ದೇಶಕರಾದ ಸ್ಟೀವನ್ ಲಾರೆನ್ಸ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು ಹಾಗೂ ಮಕ್ಕಳ ಸಂರಕ್ಷಣಾಧಿಕಾರಿ ಗೌರಿಶಂಕರ ಪ್ರತಾಪುರ ಅವರು ನಿರೂಪಿಸಿ ವಂದಿಸಿದರು.