ಮಂಡ್ಯ.30.ಆಗಸ್ಟ್.26: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ಮಾಡಿರುವ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು 2026-27ನೇ ಸಾಲಿಗೆ ಶೈಕ್ಷಣಿಕ ಸಂಯೋಜಕರಾಗಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಎನ್.ರಾಜೇಂದ್ರಸಿಂಗ್ ಬಾಬು ಅವರು ಮನವಿ ಮೂಲಕ ಒತ್ತಾಯಿಸಿದರು.
ರಾಜ್ಯದ ಪದವಿ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ತೆಗೆದು ಹಾಕಿರುವುದರಿಂದ ಜೀವನ ನಡೆಸಲು ಕಷ್ಟಕರವಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.
ಕಳೆದ ವರ್ಷ ಸುಮಾರು 3,000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಂಡಿದ್ದಾರೆ. 10 ರಿಂದ 15 ವರ್ಷಗಳಿಂದಲೂ ನಿರಂತರವಾಗಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಉಪನ್ಯಾಸಕರು ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಸರ್ಕಾರಕ್ಕೆ ಗೊತ್ತಿರುವ ಸಂಗತಿಯಾಗಿದ್ದರೂ ಅದನ್ನು ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.
2025-26ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸಿದ ಎಲ್ಲ ಅತಿಥಿ ಉಪನ್ಯಾಸಕರನ್ನು 2026-27ನೇ ಸಾಲಿಗೆ ಆಯ್ಕೆ ಮಾಡಿಕೊಳ್ಳಬೇಕು. ಸರ್ಕಾರ ಕ್ರಮ ತೆಗೆದುಕೊಳ್ಳದೇ ಹೋದರೆ ರಾಜ್ಯದಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಮಿತಿಯ ಪದಾಧಿಕಾರಿಗಳಾದ ಎಂ.ಎಸ್. ಕೃಷ್ಣ, ಬಿ.ಎಸ್. ಕುಮಾರ್, ಶಿವಕುಮಾರ್ ಇದ್ದರು.





Any questions related to ಅತಿಥಿ ಉಪನ್ಯಾಸಕರನ್ನು 2026-27ನೇ ಸಾಲಿಗೆ ಶೈಕ್ಷಣಿಕ ಸಂಯೋಜಕರಾಗಿ ನೇಮಿಸಿ!?