ಕೊಪ್ಪಳ.05.ಸೆಪ್ಟೆಂಬರ್.26: ಮಹಾತ್ಮ ಗಾಂಧೀಜಿಯವರ 157ನೇ ಜನ್ಮ ದಿನಾಚರಣೆಯ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗುತ್ತಿರುವ ಬಾಪೂಜಿ ಪ್ರಬಂಧ ಸ್ಪರ್ಧೆಯು ಕೊಪ್ಪಳ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯಬೇಕು. ಜಿಲ್ಲೆಯ ಎಲ್ಲ ಪ್ರೌಢಶಾಲೆ, ಪಿಯು ಕಾಲೇಜು, ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಆಸಕ್ತಿಯಿಂದ ಭಾಗಿಯಾಗಬೇಕು. ಎಲ್ಲ ಹೈಸ್ಕೂಲ್ಗಳು, ಪಿಯು ಕಾಲೇಜುಗಳು, ಪದವಿ ಕಾಲೇಜುಗಳು ಮತ್ತು ಸ್ನಾತಕೋತ್ತರ ಪದವಿ ಕೇಂದ್ರಗಳಿಗೆ ತುರ್ತಾಗಿ ಸುತ್ತೋಲೆ ಹೊರಡಿಸಿ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಷಯ ತಲುಪಿಸಿ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅಗತ್ಯ ಏರ್ಪಾಡು ಮಾಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಅವರು ಸಂಬoಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೆಪ್ಟೆಂಬರ್ 3ರಂದು ಸಂಜೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿಯವರು ಇಡೀ ಜಗತ್ತೇ ನಿಬ್ಬೆರಗಾಗುವಂತೆ ಇನ್ನೊಬ್ಬರಿಗಾಗಿ ಬದುಕನ್ನು ಸವೆಸಿದ ಮಹಾನ್ ಚೇತನ. ಗಾಂಧೀಜಿಯವರನ್ನು ಹಾಗೂ ಅವರ ವಿಚಾರಗಳನ್ನು ಹೊಸ ಪೀಳಿಗೆಗೆ ಪರಿಚಯಿಸುವುದು, ದಾಟಿಸುವುದು ನಮ್ಮೆಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ಇಂತಹ ಪ್ರಬಂಧ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಗಾಂಧೀಜಿಯವರನ್ನು ಓದುವಂತೆ ಪ್ರೇರೇಪಿಸುತ್ತವೆ. ಇದರಿಂಧ ವಿದ್ಯಾರ್ಥಿಗಳ ಬದುಕಲ್ಲಿಯೂ ಬದಲಾವಣೆ ಮಾಡಬಹುದು ಎಂದು ಅವರು ಹೇಳಿದರು.
ಪ್ರೌಢಶಾಲಾ ವಿಭಾಗ ಹಾಗೂ ಪದವಿ ಪೂರ್ವ ಶಿಕ್ಷಣ ವಿಭಾಗ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿಯ ಮೂರೂ ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಸೆಪ್ಟೆಂಬರ್ 10 ರೊಳಗೆ ನಡೆಸಬೇಕು. ಪ್ರತಿ ವಿಭಾಗದಲ್ಲಿಯೂ ಮೂರು ವಿಷಯಗಳನ್ನು ನೀಡಲಾಗುತ್ತಿದ್ದು ಅದರಲ್ಲಿ ಯಾವುದಾದರೂ ಒಂದು ವಿಷಯಕ್ಕೆ ವಿದ್ಯಾರ್ಥಿಗಳು ಪ್ರಬಂಧ ಬರೆಯಬೇಕು.
ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಎಲ್ಲ ಪ್ರೌಢಶಾಲೆಗಳು, ಪಿಯು ಕಾಲೇಜುಗಳು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕೇಂದ್ರಗಳಿಗೆ ಕೂಡಲೇ ಸುತ್ತೋಲೆ ರವಾನಿಸಿ ವಿಷಯ ತಿಳಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಕೊಪ್ಪಳ ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಸಿಇಓ ಅವರು ಸೂಚನೆ ನೀಡಿದರು. ಈ ಸ್ಪರ್ಧೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಾತಾ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬೇಕು.
ಆಯಾ ಹೈಸ್ಕೂಲಗಳಲ್ಲಿ ಪ್ರಬಂಧ ಸ್ಪರ್ಧೆ ನಡೆಸಿ ಅಲ್ಲಿನ ಶಿಕ್ಷಕರು ಮೌಲ್ಯಮಾಪನ ಮಾಡಿ ಅತ್ಯುತ್ತಮವಾದ ಮೂರು ಪ್ರಬಂಧಗಳನ್ನು ಆಯಾ ತಾಲೂಕಿನ ಬಿಇಓ ಕಚೇರಿಗೆ ಸಲ್ಲಿಸಬೇಕು. ಅದೇ ರೀತಿ ಪ್ರತಿ ಪಿಯು ಕಾಲೇಜುಗಳಲ್ಲಿ ಸಹ ಸ್ಪರ್ಧೆ ನಡೆಸಿ ಮೌಲ್ಯಮಾಪನ ಮಾಡಿ ಪ್ರತಿ ಪಿಯು ಕಾಲೇಜಿನಿಂದ ಅತ್ಯುತ್ತಮ ಮೂರು ಪ್ರಬಂಧಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಕಚೇರಿಗೆ ಸಲ್ಲಿಸಬೇಕು. ಅದೇ ರೀತಿ ಪದವಿ ಕಾಲೇಜುಗಳು ಹಾಗೂ ಸ್ನಾತಕೋತ್ತರ ಪದವಿ ಕೇಂದ್ರಗಳಲ್ಲಿ ಸಹ ಸ್ಪರ್ಧೆ ನಡೆಸಿ ಮೌಲ್ಯಮಾಪನ ಮಾಡಿ ಪ್ರತಿ ಕಾಲೇಜಿನಿಂದ ಅತ್ಯುತ್ತಮ ಮೂರು ಪ್ರಬಂಧಗಳನ್ನು ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಸಲ್ಲಿಸಬೇಕು.
ಎಲ್ಲ ಪ್ರೌಢಶಾಲೆಗಳು, ಪಿಯು ಕಾಲೇಜುಗಳು, ಪದವಿ ಕಾಲೇಜು-ಸ್ನಾತಕೋತ್ತರ ಪದವಿ ಕೇಂದ್ರಗಳಿoದ ಮೊದಲ ಹಂತದಲ್ಲಿ ಆಯ್ಕೆಯಾಗಿ ಬರುವ ಎಲ್ಲ ಪ್ರಬಂಧಗಳನ್ನು, ಜಿಲ್ಲಾ ಮಟ್ಟದ ಸಮಿತಿಯಲ್ಲಿ ಜಿಲ್ಲಾ ವಾರ್ತಾಧಿಕಾರಿಗಳು, ಗಾಂಧಿ ವಿಚಾರಗಳ ತಜ್ಞರು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕಾಲೇಜು, ವಿಶ್ವವಿದ್ಯಾಲಯಗಳ ಶಿಕ್ಷಕರು ಮತ್ತು ಪ್ರಾಧ್ಯಾಪಕರು ಒಳಗೊಂಡ ಸಮಿತಿಯೊಂದಿಗೆ ಪುನಃ ಪರಿಶೀಲಿಸಿ ಮೌಲ್ಯಮಾಪನ ಮಾಡಿ ಅವುಗಳಲ್ಲಿ ಅತ್ಯುತ್ತಮವೆನಿಸಿದ ಪ್ರತಿ ವಿಭಾಗದಲ್ಲಿನ ಮೂರು ಪ್ರಬಂಧಗಳನ್ನು ಆಯ್ಕೆ ಮಾಡಿ, ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವ ಪ್ರಬಂಧ ರಚನಾಕಾರರಿಗೆ 2026ರ ಅಕ್ಟೋಬರ್ 2ರಂದು ನಡೆಯುವ ಜಿಲ್ಲಾ ಮಟ್ಟದ ಗಾಂಧೀ ಜಯಂತಿ ಆಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಗೌರವಿಸಲಾಗುವುದು.
ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರು ಮೌಲ್ಯಮಾಪನ ಮಾಡಿ ರಾಜ್ಯದಲ್ಲಿ ಫಲಿತಾಂಶ ಘೋಷಿಸಲಾಗುತ್ತದೆ.
ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ ರೂ.3000, ದ್ವಿತೀಯ ಸ್ಥಾನಕ್ಕೆ ರೂ.2000 ಮತ್ತು ತೃತೀಯ ಸ್ಥಾನಕ್ಕೆ ರೂ.1000 ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಅದೇ ರೀತಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ ರೂ.31,000 ಹಾಗೂ ದ್ವಿತೀಯ ಸ್ಥಾನಕ್ಕೆ ರೂ.21,000 ಮತ್ತು ತೃತೀಯ ಸ್ಥಾನಕ್ಕೆ ರೂ.11,000 ನೀಡಲಾಗುತ್ತದೆ ಎಂದು ತಿಳಿಸಿದರು.
ವಸತಿ ನಿಲಯಗಳಲ್ಲೂ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಕೂಡಲೇ ಎಲ್ಲ ವಸತಿ ನಿಲಯಗಳಿಗೆ ಸುತ್ತೋಲೆ ಹೊರಡಿಸಿ ತಮ್ಮ ತಮ್ಮ ಇಲಾಖೆಗಳ ಎಲ್ಲ ವಸತಿ ನಿಲಯಗಳಲ್ಲಿ ಸಹ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಸೆ.10ರೊಳಗೆ ಆಯೋಜನೆ ಮಾಡಲು ಕ್ರಮ ವಹಿಸಬೇಕು ಎಂದು ಸಿಇಓ ಅವರು ಸೂಚನೆ ನೀಡಿದರು.
ಪ್ರೌಢಶಾಲೆ, ಪಿಯು ಕಾಲೇಜು, ಪದವಿ-ಸ್ನಾತಕೋತ್ತರ ಪದವಿ ಈ ಮೂರು ವಿಭಾಗದಲ್ಲಿ ಓದುವ ವಸತಿ ನಿಲಯಗಳ ವಿದ್ಯಾರ್ಥಿಗಳು ತಮ್ಮ ವಸತಿ ನಿಲಯಗಳಲ್ಲಿ ಅಥವಾ ಶಾಲೆ, ಕಾಲೇಜುಗಳ ಪೈಕಿ ಯಾವುದಾದರು ಒಂದು ಕಡೆಗೆ ಮಾತ್ರ ಸ್ಪರ್ಧೆಯಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಆಯಾ ತಾಲೂಕಿನ ಬಿಇಓ ಅವರು, ಪಿಯು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕೊಪ್ಪಳ ವಿಶ್ವವಿದ್ಯಾಲಯದ ಅಧಿಕಾರಿಗಳು ನಿಗದಿಪಡಿಸಿದ ಅವಧಿಯೊಳಗೆ ಸ್ಪರ್ಧೆ ನಡೆಸಿ ಪ್ರಬಂಧಗಳನ್ನು ಜಿಲ್ಲಾ ವಾರ್ತಾಧಿಕಾರಿಗಳು, ವಾರ್ತಾ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು. ವಸತಿ ನಿಲಯಗಳಲ್ಲಿ ನಡೆಯುವ ಸ್ಪರ್ಧೆಯ ಪ್ರಬಂಧಗಳನ್ನು ಸಹ ವಾರ್ತಾ ಇಲಾಖೆಗೆ ಸಲ್ಲಿಸಬೇಕು ಎಂದು ಸಿಇಓ ಅವರು ಸೂಚನೆ ನೀಡಿದರು. ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಅವರು ಬಾಪೂಜಿ ಪ್ರಬಂಧ ಸ್ಪರ್ಧೆಯ ನಿಯಮಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ನಾಗಮಣಿ, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ ದಂಡಪ್ಪಗೌಡ ಪಾಟೀಲ ಉಪಸ್ಥಿತರಿದ್ದರು. ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರಾದ ರಮೇಶ ನಾಯಕ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಅಜ್ಜಪ್ಪ ಸೊಗಲದ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಾಜಶೇಖರ ಪಾಟೀಲ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅವರು ಗೂಗಲ್ ಮೀಟ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು.





Any questions related to ಬಾಪೂಜಿ ಪ್ರಬಂಧ ಸ್ಪರ್ಧೆ ಕೊಪ್ಪಳ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯಲಿ: ವರ್ಣಿತ್ ನೇಗಿ.?