ಬೀದರ.13ಫೆಬ್ರುವರಿ.25:- ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ಊಟ ಸಹಿತ ವಸತಿಯ ಅಗತ್ಯತೆ ಮನಗಂಡು ಸರಕಾವು ರಾಜ್ಯಾದ್ಯಂತ ನೂರಾರು ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದರು.
ಬೀದರ ನಗರದ ಹಳ್ಳದಕೇರಿಯಲ್ಲಿ 12 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ಎರಡು ವಿದ್ಯಾರ್ಥಿ ನಿಲಯಗಳನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಡಾ.ಬಾಬಾಸಾಹೇಬ್ ಅಂಬೇಡ್ಕರ ಅವರು ಗುರಿ, ಆತ್ಮ ವಿಶ್ವಾಸ ಛಲದಿಂದಾಗಿ ವಿಶ್ವಮಟ್ಟದಲ್ಲಿ ಪ್ರಸಿದ್ದಿ ಪಡೆದರು. ಶಿಕ್ಷಣ ಸಂಘಟನೆ, ಹೋರಾಟ ಅವರ ವಾಕ್ಯವಾಗಿತ್ತು. ಶೋಷಿತರ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಸರಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಬೇಕು.

ಊಟ ಹಾಗೂ ವಸತಿಯ ಸಮಸ್ಯೆಯಾಗದಂತೆ ಬಾಲಕ ಹಾಗೂ ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯಗಳನನ್ನು 12 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದ್ದು, ಇದರಿಂದ ಸಾವಿರಾರು ವಿದ್ಯಾರ್ಥಿಗಳು ಉಪಯೋಗವಾಗಲಿದೆ ಎಂದರು.

ವಿದ್ಯಾರ್ಥಿಗಳು ಉತ್ತಮವಾದ ಶಿಕ್ಷಣ ಪಡೆದು ಜ್ಞಾನ ಸಂಪಾದಿಸಿ ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಬೇಕು. ಪರಿಶ್ರಮ ಮಾಡಿ ಗುರಿ ಸಾಧಿಸಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಆಧುನಿಕ ಯುಗದಲ್ಲಿ ಎಲ್ಲೆಡೆ ಮಾಹಿತಿ ದೊರೆಯುತ್ತದೆ. ಅನೇಕರು ಐಎಎಸ್, ಐಪಿಎಸ್ ಹುದ್ದೆಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಬೀದರ ವಿದ್ಯಾರ್ಥಿಗಳು ಸಹ ಉತ್ತಮ ಸಾಧನೆ ಮಾಡುವಂತೆ ಕೋರಿದರು.
ಈ ಕಾರ್ಯಕ್ರಮದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್, ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
