ಬೆಂಗಳೂರು.11.ಮಾರ್ಚ.25:- ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಸಚಿವ ಸಂಪುಟ ಉಪಸಮಿತಿಯ ವರದಿಗಳ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಹುದ್ದೆಗಳ ನೇಮಕಾತಿ, ಮುಂಬಡ್ತಿ, ಜೇಷ್ಠತೆ ಮುಂತಾದ ಪ್ರಕ್ರಿಯೆಗಳು ಮಂದಗತಿಯಲ್ಲಿ ನಡೆಯುತ್ತಿರುವುದನ್ನು ತೀವ್ರವಾಗಿ ಆಕ್ಷೇಪಿಸಿ, 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶೆ ಕುರಿತ ಸಂಪುಟ ಉಪ ಸಮಿತಿ ಪ್ರತಿ ಹದಿನೈದು ದಿನಗಳಿಗೊಮ್ಮೆ ಸಭೆ ಸೇರಿ ಸರ್ಕಾರದ ಐದು ಇಲಾಖೆಗಳ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದೆ.
ಸಂಪುಟ ಉಪ ಸಮಿತಿ ಸಭೆಗೆ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರು ಸಭೆಗೆ ಬಾರದೆ ತಮ್ಮ ಪ್ರತಿನಿಧಿಗಳನ್ನು ಕಳುಹಿಸುತ್ತಿರುವುದು ಖಂಡನೀಯ. ಸಭೆಗೆ ಬರುವ ಕಿರಿಯ ಅಧಿಕಾರಿಗಳು ವಿಷಯದ ಕುರಿತು ಮಾಹಿತಿ ತಿಳಿದುಕೊಳ್ಳದೆ ನಿರ್ಲಕ್ಷ್ಯ ಮನೋಭಾವ ರೂಢಿಸಿಕೊಂಡಿರುವುದಕ್ಕೆ ಸಂಪುಟ ಉಪ ಸಮಿತಿಯು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ. ಮುಂದಿನ ಸಭೆಗಳಿಗೆ ಹಾಜರಾಗದ ಹಿರಿಯ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವ ಮೂಲಕ ಕಠಿಣ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ.
ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನಿ. 371(ಜೆ) ಪಾಲಿಸದೆ ಇರುವ ಹಿನ್ನೆಲೆಯಲ್ಲಿ ಸ್ಥಳೀಯ ವೃಂದದ ಅಧಿಕಾರಿಗಳು ಹಾಗೂ ನೌಕರರಿಗೆ ಮುಂಬಡ್ತಿ ಹಾಗೂ ಸೇವಾ ಜೇಷ್ಠತೆ ಪರಿಗಣಿಸಲು ಕಳೆದ ಸಭೆಯಲ್ಲಿ ಸೂಚನೆ ನೀಡಲಾಗಿದ್ದರೂ, ಇಂದಿನ ಸಭೆಗೆ ಸಹಕಾರ ಇಲಾಖೆಯ ಯಾವುದೇ ಅಧಿಕಾರಿಗಳು ಬಾರದೆ ಗೈರು ಹಾಜರಾಗಿರುವುದನ್ನು ಗಂಭೀರವಾಗಿ ಪರಿಗಣಿಸಿ ಹಿರಿಯ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ನೀಡಲು ಸೂಚಿಸಲಾಗಿದೆ.
ಕಳೆದ ಸಭೆಯಲ್ಲಿ ನಡೆದ ನಡಾವಳಿಗಳಿಗೆ ಸಂಬಂಧಿಸಿದಂತೆ ಅನುಪಾಲನಾ ವರದಿ ಸಲ್ಲಿಸದ ಒಳಾಡಳಿತ ಇಲಾಖೆ, ಅಬಕಾರಿ ಇಲಾಖೆ ಹಾಗೂ ಪೊಲೀಸ್ ವೈರ್ಲೆಸ್ ಘಟಕ ಇಲಾಖೆಗಳಿಗೂ ನೋಟೀಸ್ ಜಾರಿ ಮಾಡುವಂತೆ ಆದೇಶಿಸಲಾಗಿದೆ.
ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರು ಮುಂದಿನ ಸಭೆಗೆ ಹಾಜರಾಗುವುದರೊಂದಿಗೆ, ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಹುದ್ದೆಗಳ ನೇಮಕಾತಿ, ಮುಂಬಡ್ತಿ, ಜೇಷ್ಠತೆಯಲ್ಲಿನ ಲೋಪದೋಷಗಳಂತಹ ಪ್ರಕರಣಗಳಲ್ಲಿ ನ್ಯಾಯಾಲಯಗಳನ್ನು ಪ್ರತಿನಿಧಿಸುತ್ತಿರುವ ವಕೀಲರನ್ನು ಆಹ್ವಾನಿಸಬೇಕೆಂದು ತಿಳಿಸಲಾಗಿದೆ.
ಸಭೆಯಲ್ಲಿ ಸಚಿವರಾದ ಸಚಿವ ಡಾ. ಶರಣಪ್ರಕಾಶ್ ಪಾಟೀಲ್,ಈಶ್ವರ ಖಂಡ್ರೆ, ರಹೀಂಖಾನ್ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು 371 ಜೆ ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶೆಗಾಗಿ ರಚಿಸಲಾಗಿರುವ ಸಚಿವ ಸಂಪುಟದ ಉಪ ಸಮಿತಿಯ ಸಭೆ ನಡೆಯಿತು. ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಹಾಗೂ ಹಜ್ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಭಾಗಿಯಾಗಿದ್ದರು.