16/06/2025 8:47 PM

Translate Language

Home » ಲೈವ್ ನ್ಯೂಸ್ » ವಿಶ್ವವಿದ್ಯಾಲಯ ವಿಲೀನಗೊಳಿಸಿದ್ರೆ ತೀವ್ರ ಹೋರಾಟ ಸರ್ಕಾರಕೆ ಎಚ್ಚರಿಕೆ.!

ವಿಶ್ವವಿದ್ಯಾಲಯ ವಿಲೀನಗೊಳಿಸಿದ್ರೆ ತೀವ್ರ ಹೋರಾಟ ಸರ್ಕಾರಕೆ ಎಚ್ಚರಿಕೆ.!

Facebook
X
WhatsApp
Telegram

ಹಾವೇರಿ.25.ಮಾರ್ಚ್.25:- ರಾಜ್ಯದಲಿ ವಿಶ್ವವಿದ್ಯಾಲಯ ಮುಚ್ಚುವ ಅಥವಾ ವಿಲೀನಗೊಳಿಸುವುದು ಕೆಲಸ ಸರ್ಕಾರ ಮಾಡುತ್ತಿದೆ. ಹಾವೇರಿ ವಿಶ್ವವಿದ್ಯಾಲಯ ಮುಚ್ಚುವ ಬದಲು ಕರ್ಣಾಟಕ ವಿಶ್ವವಿದ್ಯಾಲಯ ಜೊತೆ ವಿಲೀನಗೊಳಿಸುವುದು ಸರ್ಕಾರ ಚಿಂತನೆ ನಡೆಸುತ್ತಿದೆ. ಸರ್ಕಾರದ ಈ ನಿರ್ಧಾರ ಸರಿಯಲ್ಲ. ಈ ರೀತಿ ಮಾಡಿದರೆ, ತೀವ್ರ ಸ್ವರೂಪದ ಹೋರಾಟ ಆರಂಭಿಸಲಾಗುವುದು’ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಎಚ್ಚರಿಸಿದರು.

ಹಾವೇರಿ ಜಿಲ್ಲೆಯ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ

ನಗರದ ಸರ್ಕಾರಿ ನೌಕರರ ಸಭಾಭವನದಲ್ಲಿ ‘ಹಾವೇರಿ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ’ ವತಿಯಿಂದ ಸೋಮವಾರ ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಜನರ ಆಶೋತ್ತರಗಳನ್ನು ಈಡೇರಿಸುವುದು ಎಷ್ಟು ಮುಖ್ಯವೋ, ಶಿಕ್ಷಣ ನೀಡುವುದೂ ಅಷ್ಟೇ ಮುಖ್ಯ. ಪ್ರತಿಯೊಬ್ಬರನ್ನು ಶಿಕ್ಷಣವಂತರನ್ನಾಗಿ ಮಾಡಿ ಸ್ವಾವಲಂಬಿಗಳಾಗಿಸಲು ಪೂರಕ ಯೋಜನೆಗಳನ್ನು ಜಾರಿಗೆ ತರಬೇಕು. ಆದರೆ, ಸರ್ಕಾರ ಹಾವೇರಿ ವಿಶ್ವವಿದ್ಯಾಲಯವನ್ನು ವಿಲೀನದ ಹೆಸರಲ್ಲಿ ಮುಚ್ಚಲು ಹೊರಟಿರುವುದು ಖಂಡನೀಯ’ ಎಂದರು.

‘ಹಾವೇರಿ ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಲು ಜಿಲ್ಲೆಯ ಎಲ್ಲ ಸ್ವಾಮೀಜಿಗಳು ಒಗ್ಗಟ್ಟಾಗಿದ್ದೇವೆ. ಸರ್ಕಾರ ಈ ವಿಶ್ವವಿದ್ಯಾಲಯ ಮುಚ್ಚುವ ಅಥವಾ ವಿಲೀನಗೊಳಿಸುವ ಪ್ರಕ್ರಿಯೆಯಿಂದ ಹಿಂದೆ ಸರಿಯಬೇಕು. ಹಾವೇರಿ ವಿಶ್ವವಿದ್ಯಾಲಯವನ್ನು ಉಳಿಸಿಕೊಂಡು, ಸೂಕ್ತ ಅನುದಾನ ನೀಡಿ ಪ್ರೋತ್ಸಾಹಿಸಬೇಕು’ ಎಂದು ಹೇಳಿದರು.

ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎ. ಮುರಿಗೆಪ್ಪ ಮಾತನಾಡಿ, ‘ರಾಜ್ಯ ಸರ್ಕಾರವೇ ಸ್ಥಾಪಿಸಿರುವ ವಿಶ್ವವಿದ್ಯಾಲಯವನ್ನು ಎರಡು ವರ್ಷಗಳ ನಂತರ, ರಾಜ್ಯ ಸರ್ಕಾರವೇ ಮುಚ್ಚುತ್ತಿರುವುದು ವಿಪರ್ಯಾಸ. ಹಾವೇರಿ ವಿಶ್ವವಿದ್ಯಾಲಯಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಹೋರಾಟ ನಡೆಯಬೇಕಿತ್ತು. ಆದರೆ, ಈಗ ವಿಶ್ವವಿದ್ಯಾಲಯ ಉಳಿಸಿಕೊಳ್ಳಲು ಹೋರಾಟ ಮಾಡುವ ಸ್ಥಿತಿ ಬಂದಿರುವುದು ಶೋಚನೀಯ’ ಎಂದರು.

‘ಸಂಘ-ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳು ಮಾತ್ರವಲ್ಲದೇ ಪೋಷಕರು ಸಹ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಪಕ್ಷಾತೀತವಾಗಿ ಹೋರಾಟ ನಡೆಸಿ ವಿಶ್ವವಿದ್ಯಾಲಯ ಉಳಿಸಿಕೊಂಡು, ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕು’ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ ಮಾತನಾಡಿ, ‘ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಏಕಾಏಕಿ ವಿಶ್ವವಿದ್ಯಾಲಯ ಮುಚ್ಚಿದರೆ, ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗಲಿದ್ದಾರೆ. ಹೀಗಾಗಿ, ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

ಸಾಹಿತಿ ಸತೀಶ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಬಣ್ಣದ ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಎಐಟಿಯುಸಿ ಜಿಲ್ಲಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ, ಮುಖಂಡರಾದ ಉಡಚಪ್ಪ ಮಾಳಗಿ, ಮಲ್ಲಿಕಾರ್ಜುನ ಬಳ್ಳಾರಿ ಇದ್ದರು.

ಮುಖ್ಯಮಂತ್ರಿ ಭೇಟಿ

‘ಜಿಲ್ಲೆಯ ಆರು ಜನ ಶಾಸಕರು ವಿಶ್ವವಿದ್ಯಾಲಯ ಉಳಿಸಲು ಪ್ರಯತ್ನಿಸುತ್ತಿದ್ದಾರೆ. ಹಾವೇರಿ ವಿಶ್ವವಿದ್ಯಾಲಯ ಮುಚ್ಚದಂತೆ ಸರ್ಕಾರದ ಮನವೋಲಿಸುತ್ತಿದ್ದಾರೆ’ ಎಂದು ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ ಹೇಳಿದರು. ದುಂಡು ಮೇಜಿನ ಸಭೆಯಲ್ಲಿ ಮಾತನಾಡಿದ ಅವರು ‘ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಮುಖಂಡರ ನಿಯೋಗವನ್ನು ಮುಖ್ಯಮಂತ್ರಿ ಬಳಿ ಕರೆದೊಯ್ದು ಭೇಟಿ ಮಾಡಿಸುತ್ತೇನೆ’ ಎಂದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!