ಚನ್ನಗಿರಿ.17.ಮೇ.25:- ಪ್ರಸಕ್ತ ಸಾಲಿನಲ್ಲಿ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಖಾಲಿ ಇರುವ 2,000 ಬೋಧಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಲಾಗುವುದು.
ರಾಜ್ಯ ಸರ್ಕಾರ ಎರಡು ವರ್ಷಗಳಲ್ಲಿ ಉನ್ನತ ಶಿಕ್ಷಣ ಇಲಾಖೆ ₹2,500 ಕೋಟಿ ಅನುದಾನವನ್ನು ವಿವಿಧ ಕಾರ್ಯಗಳಿಗೆ ಉಪಯೋಗಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು.
ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮದ ಮೌದ್ಗಲ್ ಆಂಜನೇಯ ಸ್ವಾಮಿ ಸಮುದಾಯ ಭವನದಲ್ಲಿ ಶನಿವಾರ ನಡೆದ ಸಾಧನಾ ಸಮಾವೇಶದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹4.50 ಕೋಟಿ ಅನುದಾನ ಮಂಜೂರು ಮಾಡಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗುತ್ತದೆ. ಹಾಗೆಯೇ ಇಲ್ಲಿನ ಶಾಸಕರ ಮನವಿಯಂತೆ ಪಟ್ಟಣದಲ್ಲಿ ಎಇಟಿಪಿ ಕೇಂದ್ರವನ್ನು ಪ್ರಾರಂಭಿಸಲಾಗುವುದು. ಇಲ್ಲಿನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮುಂಬರುವ ಸಾಲಿನಿಂದ 3 ಹೊಸ ಕೋರ್ಸ್ ಆರಂಭಿಸಲಾಗುವುದು.
‘ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ಮೇ 20ರಂದು ಹೊಸಪೇಟೆಯಲ್ಲಿ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಭಾಗವಹಿಸಬೇಕು’ ಎಂದು ಮನವಿ ಮಾಡಿದರು.
‘ಎರಡು ವರ್ಷದ ಅವಧಿಯಲ್ಲಿ ಕೆರೆಗಳನ್ನು ತುಂಬಿಸುವ ಕಾಮಗಾರಿಗೆ ₹365 ಕೋಟಿ, ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಭಿವೃದ್ಧಿಗೆ ₹50 ಕೋಟಿ ಸೇರಿದಂತೆ ಒಟ್ಟು ₹500 ಕೋಟಿಗಿಂತಲೂ ಹೆಚ್ಚು ಅನುದಾನವನ್ನು ಕ್ಷೇತ್ರದ ಅಭಿವೃದ್ಧಿಗೆ ತರಲಾಗಿದೆ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.
ಕೆಪಿಸಿಸಿ ವಕ್ತಾರ ಹೊದಿಗೆರೆ ರಮೇಶ್, ಕಾರ್ಯದರ್ಶಿ ವಡ್ನಾಳ್ ಜಗದೀಶ್, ಜಿಲ್ಲಾ ಕಾರ್ಯದರ್ಶಿ ಸಿ. ನಾಗರಾಜ್, ಉಪಾಧ್ಯಕ್ಷ ವೀರೇಶ್ ನಾಯ್ಕ, ಸಂತೇಬೆನ್ನೂರು ಬ್ಲಾಕ್ ಅಧ್ಯಕ್ಷ ಮಹಮದ್ ಜಬೀವುಲ್ಲಾ, ಮಹಿಳಾ ಘಟಕದ ಅಧ್ಯಕ್ಷೆ ಸವಿತಾ, ಚನ್ನಗಿರಿ ಘಟಕದ ಜ್ಯೋತಿ ಕೋರಿ, ಭೈರನಹಳ್ಳಿ ಮಂಜಣ್ಣ, ಜಿ.ಆರ್. ಲೋಕೇಶಪ್ಪ, ಜಯ್ಯಣ್ಣ, ಹನುಮಂತಪ್ಪ ಉಪಸ್ಥಿತರಿದ್ದರು. ಚನ್ನಗಿರಿ ಬ್ಲಾಕ್ ಸಮಿತಿ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು.